ಜಿಟಿ ದೇವೇಗೌಡಗೆ ಟಿಕೆಟ್ ನೀಡಿದ್ದಕ್ಕೆ ವಿರೋಧ: ಜೆಡಿಎಸ್ ತೊರೆದ ಎಚ್‌ಡಿಕೆ ನಿಷ್ಠಾವಂತರು

ಜೆಡಿಎಸ್ ಪಂಚರತ್ನ ಯಾತ್ರೆ ಆರಂಭಿಸಿರುವ ಬೆನ್ನಲ್ಲೇ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಪದಾಧಿಕಾರಿಗಳು, ಪ್ರಮುಖರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಬಲ ಕ್ರೋಢೀಕರಣಕ್ಕಾಗಿ ಪಂಚರತ್ನ ಯಾತ್ರೆ ಆರಂಭಿಸಿರುವ ಬೆನ್ನಲ್ಲೇ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಪದಾಧಿಕಾರಿಗಳು, ಪ್ರಮುಖರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಬಂಡಾಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಸುವ ಪಕ್ಷದ ನಿರ್ಧಾರಕ್ಕೆ ಪಕ್ಷ ನಾಯಕರು ಅಸಮಾಧಾನಗೊಂಡಿದ್ದಾರೆಂದು ತಿಳಿದುಬಂದಿದೆ.

ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಬಂಡಾಯ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಭಿಮಾನ ಕಾರ್ಯಕರ್ತರ ಸಭೆ ನಡೆಸಿ, ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.

ಈ ಹಿಂದೆ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಎರಡರೊಂದಿಗೂ ಅವರು ಒಲವು ಹೊಂದಿದ್ದು, ಅವರಿಗೆ ಮತ್ತು ಅವರ ಪುತ್ರ ಹರೀಶ್ ಗೌಡ ಅವರಿಗೆ ವಿಧಾನಸಭೆ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಎರಡೂ ಪಕ್ಷಗಳಿಂದ ಯಾವುದೇ ಭರವಸೆ ಸಿಗದ ಕಾರಣ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರ ಮುಂದೆ ಮೊಸಳೆ ಕಣ್ಣೀರು ಸುರಿಸಿ ಪಕ್ಷಕ್ಕೆ ಮರಳಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಮೈಸೂರು ತಾಲೂಕು ಜೆಡಿಎಸ್‌ ಮಾಜಿ ಅಧ್ಯಕ್ಷ ಬೀರೇಗುಂಡಿ ಬಸವಣ್ಣ ಮಾತನಾಡಿ, ಈ ಹಿಂದೆ ದೇವೇಗೌಡರ ಗೆಲುವಿಗೆ ಶ್ರಮಿಸಿದ್ದೆ, ಆದರೆ, ಹಿಂದಿನ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಿ ಸಚಿವರಾದ ಬಳಿಕ ನನ್ನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆಂದು ಹೇಳಿದರು.

ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದರು, ಮೈಸೂರಿನ ಪಕ್ಷದ ನಾಯಕರಲ್ಲಿ ಒಬ್ಬರು ಚಾಮುಂಡೇಶ್ವರಿಯಿಂದ ಪಕ್ಷದ ಅಭ್ಯರ್ಥಿಯಾಗುತ್ತಾರೆ ಎಂದು ಈ ಹಿಂದೆ ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ ಈಗ ದೇವೇಗೌಡರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಅವರು ನಿರಾಸೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com