ಕಲಬುರಗಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸಲು ದೇಶದ ಪ್ರಾದೇಶಿಕ ಪಕ್ಷಗಳನ್ನು ಬಲಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇತ್ತೀಚೆಗೆ ಹೈದರಾಬಾದ್ನಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರನ್ನು ಭೇಟಿ ಮಾಡಿ, ರಾಷ್ಟ್ರಮಟ್ಟದಲ್ಲಿ ಪ್ರಾದೇಶಿಕ ಪಕ್ಷಗಳ ಬಲಪಡಿಸುವ ಮತ್ತು ದಲಿತರ, ರೈತರ ಜೀವನ ಸ್ಥಿತಿಯನ್ನು ಸುಧಾರಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಯಿತು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಬೇಕು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್ ಅವರ ಹೇಳಿಕೆಯನ್ನು ಬೆಂಬಲಿಸುವುದಾಗಿ ಹೇಳಿದರು.
ಕರ್ನಾಟಕದ ರಾಯಚೂರನ್ನು ತೆಲಂಗಾಣದಲ್ಲಿ ವಿಲೀನಗೊಳಿಸುವ ಕುರಿತು ಕೆ.ಚಂದ್ರಶೇಖರ್ ರಾವ್ ಅವರ ವಿವಾದಾತ್ಮಕ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಚಂದ್ರಶೇಖರ ರಾವ್ ಅವರೊಂದಿಗೆ ಈ ವಿಷಯ ಪ್ರಸ್ತಾಪಿಸಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿಯಿಂದಾಗಿ ರಾಯಚೂರು ಜಿಲ್ಲೆಯ ಜನರು ತಮ್ಮ ಜಿಲ್ಲೆಯನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಲು ಬಯಸುತ್ತಾರೆ ಎಂದು ಹೇಳಿರುವುದಾಗಿ ರಾವ್ ತಮಗೆ ತಿಳಿಸಿದ್ದಾರೆ ಎಂದರು.
ಎಲ್ಲ ದಾಖಲೆಗಳೊಂದಿಗೆ ಸಚಿವರ ಬಗ್ಗೆ ಮಾತನಾಡುತ್ತೇನೆ
ವಿಧಾನಮಂಡಲ ಅಧಿವೇಶನದಲ್ಲಿ ಸಚಿವರೊಬ್ಬರ ಬಗ್ಗೆ ಮಾತನಾಡುವಾಗ ಅವರು ನನ್ನ ವಿರುದ್ಧ ಏಕವಚನದಲ್ಲಿವಾಗ್ದಾಳಿ ನಡೆಸಿದರು ಮತ್ತು ನನ್ನನ್ನೇ ದೂರಿದರು. ಆದರೆ ಗುರುವಾರ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅವರ ಭ್ರಷ್ಟಾಚಾರದ ಬಗ್ಗೆ ನಾನು ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಎಲ್ಲಾ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ, ಆ ಸಚಿವರ ಹೆಸರನ್ನು ಮಾತ್ರ ಉಲ್ಲೇಖಿಸಲಿಲ್ಲ.
ದೇವೇಗೌಡರ ಆರೋಗ್ಯ ಸುಧಾರಿಸುತ್ತಿದೆ
ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ದೇವೇಗೌಡರ ಆರೋಗ್ಯ ವಿಚಾರಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಂದಿದ್ದರು. ಅವರ ಭೇಟಿಗೆ ಯಾವುದೇ ರಾಜಕೀಯ ಪ್ರಾಮುಖ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
Advertisement