ಕರ್ನಾಟಕದಲ್ಲಿ ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ, ಪೊಲೀಸರಿಗೆ ತಕ್ಕ ಪಾಠ ಕಲಿಸುತ್ತೇವೆ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಚಾಮರಾಜನಗರ: ಕರ್ನಾಟಕದಲ್ಲಿ ಇನ್ನು 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ. ತಾರತಮ್ಯ ಮಾಡುತ್ತಿರುವ ಪೊಲೀಸರಿಗೆ ಆಗ ಬುದ್ಧಿ ಕಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಗುಂಡ್ಲುಪೇಟೆಯಲ್ಲಿ ಇಂದು ಆರಂಭವಾದ ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯಾವುದೇ ನಾಯಕರು ಈ ರೀತಿಯ ಪಾದಯಾತ್ರೆ ಮಾಡಿಲ್ಲ. ಈ ಪಾದಯಾತ್ರೆ ಯಶಸ್ವಿಯಾಗಲಿದೆ, ಕರ್ನಾಟಕ, ಭಾರತ ರಾಜಕೀಯ ಚಿತ್ರಣ ಬದಲಾಗಲಿದೆ ಎಂದರು. 

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಜನರು ಈಗ ಆತಂಕದ ಪರಿಸ್ಥಿತಿಯಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ರೂಪಿಸಿರುವ​​ ಸಂವಿಧಾನ ಬೇಡ ಎಂದು ಇವರು ಹಲವು ಬಾರಿ ಹೇಳಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಇವರಿಗೆ ನಂಬಿಕೆ ಇಲ್ಲ. ಬಿಜೆಪಿಯವರಿಗೆ ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು. ಜನರನ್ನು ಇಬ್ಭಾಗ ಮಾಡುವುದೇ ಇವರ ಉದ್ದೇಶ. ಸಂವಿಧಾನ ಉಳಿಸುವ ಕೆಲಸಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು. 

ದೇಶದಲ್ಲಿ ಈಗ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಂವಿಧಾ‌ನ ಉಳಿಸಲು ನಾವು ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಪೊಲೀಸರ ವಿರುದ್ಧ ಆಕ್ರೋಶ: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದನ್ನು ಸಮಾವೇಶದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ 6 ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. 

ರಾಹುಲ್ ಗಾಂಧಿ ಅವರು 510 ಕಿಮೀ ಪಾದಯಾತ್ರೆ ಮಾಡಲಿದ್ದಾರೆ. ಸ್ವಾತಂತ್ರ್ಯಾನಂತರ ಒಂದೇ ಬಾರಿ ಇಷ್ಟೊಂದು ದೂರವನ್ನು ಪಾದಯಾತ್ರೆ ಬೇರೆ ಯಾವ ನಾಯಕರೂ ಪಕ್ಷವೂ ಕೂಡ ಕ್ರಮಿಸಿಲ್ಲ. ಕೋಮುವಾದಿ ರಾಜಕಾರಣದಿಂದ ಬೇಸತ್ತು ರಾಹುಲ್ ಗಾಂಧಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಸ್ತುತ ಅಲ್ಪಸಂಖ್ಯಾತರು, ದಲಿತರು, ಮಹಿಳೆಯರು ಆತಂಕದಲ್ಲಿ ಬದುಕುತ್ತಿದ್ದಾರೆ. ಬಿಜೆಪಿಯು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡ ಪಕ್ಷ ಅಲ್ಲ. ಬಿಜೆಪಿ ನಾಯಕರು ಹಲವು ಬಾರಿ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಜಾತ್ಯತೀತ ತತ್ವದಲ್ಲಿ ಅವರಿಗೆ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com