ಮೈಸೂರು: ಇತ್ತೀಚೆಗಷ್ಟೇ ತಂದೆ ಧ್ರುವನಾರಾಯಣ್ ಕಳೆದುಕೊಂಡು ಅವರ ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ್ ಗೆ ಇದೀಗ ತಾಯಿ ವಿಯೋಗವಾದ ಬೆನ್ನಲ್ಲೇ ದರ್ಶನ್ ಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಸ್ಪರ್ಧೆಯಿಂದ ಹಿಂದೆ ಸರಿದು ಬೆಂಬಲ ನೀಡುವ ಕುರಿತು ಘೋಷಣೆ ಮಾಡಿದ್ದಾರೆ.
ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರು ಕಳೆದ ತಿಂಗಳು ತಂದೆ ಆರ್ ಧ್ರುವನಾರಾಯಣ ಅವರನ್ನು ಕಳೆದುಕೊಂಡ ನೋವಿನಲ್ಲಿ ಚುನಾವಣೆ ಪ್ರಚಾರಕ್ಕಿಳಿದಿದ್ದರು. ಆದರೆ, ಇದೀಗ ದರ್ಶನ್ ತಾಯಿ ವೀಣಾರನ್ನು ಸಹ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣ ವಿರುದ್ಧ ಜೆಡಿಎಸ್(JDS) ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವರಿಗೆ ಬೆಂಬಲಿಸಲು ಮುಂದಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತೆನಾಡಿದ ಜಿ.ಟಿ.ದೇವೇಗೌಡ, ದಿವಂಗತ ಆರ್.ಧ್ರುವನಾರಾಯಣ ಮಕ್ಕಳು ಅನಾಥರಾಗಿದ್ದಾರೆ. ಧ್ರುವನಾರಾಯಣರ ಇಬ್ಬರು ಮಕ್ಕಳು ಲವ-ಕುಶ ರೀತಿ ಕಾಣುತ್ತಿದ್ದಾರೆ. ತಂದೆ ಕಳೆದುಕೊಂಡ ನೋವು ಇರುವಾಗಲೇ ತಾಯಿ ಕಳೆದುಕೊಂಡಿದ್ದಾರೆ. ಇಂತಹ ದುಃಖದಲ್ಲಿರುವವರ ಎದುರು ಸ್ಪರ್ಧಿಸಲು ನಮಗೆ ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಸ್ಪರ್ಧೆ ಮಾಡಬೇಕಾ ಬೇಡ್ವಾ ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮತ್ತೋರ್ವ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯಿಸಿದ್ದು, ಧ್ರುವನಾರಾಯಣ್ ಅಗಲಿಕೆ ಹಿನ್ನೆಲೆ ದರ್ಶನ್ಗೆ ಬೆಂಬಲ ಕೊಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಮೈಸೂರು ಭಾಗದ ಶಾಸಕರು ಮುಖಂಡರ ಜೊತೆ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಕಳೆದ ವಾರ ಈ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಿದ್ದರು. ತಂದೆ ಕಳೆದುಕೊಂಡ ಹಿನ್ನೆಲೆ ಬೆಂಬಲ ಕೊಡುವ ಬಗ್ಗೆ ಚರ್ಚೆಯಾಗಿತ್ತು. ಇದೀಗ ದರ್ಶನ್ ತಾಯಿ ಸಹ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಖಂಡಿತಾ ಬೆಂಬಲ ನೀಡುತ್ತಾರೆ. ಅವರೇ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡುತ್ತಾರೆ. ಖುದ್ದು ಕುಮಾರಸ್ವಾಮಿ ಅವರು ದರ್ಶನ್ಗೆ ಸಾಂತ್ವನ ಹೇಳಿ ಬೆಂಬಲ ಘೋಷಿಸುತ್ತಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ಈ ಬಾರಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದರು. ಇನ್ನು ಡಾ. ಹೆಚ್.ಸಿ ಮಹಾದೇವಪ್ಪ ಸಹ ಇದೇ ನಂಜನಗೂಡ ಕ್ಷೇತ್ರದ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟಿಕೆಟ್ಗಾಗಿ ಈ ಇಬ್ಬರು ನಾಯಕರು ಭಾರಿ ಕಸರತ್ತು ನಡೆಸಿದ್ದರು. ಮಹಾದೇವಪ್ಪ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಧ್ರುವನಾರಾಐನ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ದುರದೃಷ್ಟವಶಾತ್ ಅವರು ಮಾರ್ಚ್ 11 ರಂದು ಅಕಾಲಿಕ ನಿಧನ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ನಂಜನಗೂಡು ಕಾಂಗ್ರೆಸ್ ಟಿಕೆಟ್ ಮಹಾದೇವಪ್ಪ ಅವರಿಗೆ ಖಚಿತ ಎನ್ನಲಾಗಿತ್ತು.
ಆದರೆ, ಧ್ರುವನಾರಾಯಣ ಅವರ ಅಭಿಮಾನಿಗಳು ಪುತ್ರ ದರ್ಶನ್ ಅವರಿಗೆ ಟಿಕೆಟ್ ನಿಡಬೇಕೆಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಾದೇವಪ್ಪ ಅವರ ಬಳಿ ಮನವಿ ಮಾಡಿದ್ದರು. ಅಂತಿಮವಾಗಿ ಮಾನವೀಯತೆ ಆಧಾರದ ಮೇಲೆ ಮಹಾದೇವಪ್ಪ ಅವರು ಟಿಕೆಟ್ ರೇಸ್ನಿಂದ ಹಿಂದೆ ಸರಿದು ದರ್ಶನ್ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದರ್ಶನ್ ಧ್ರುವನಾರಾಯಣ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಇದೀಗ ಜೆಡಿಎಸ್ ಸಹ ದರ್ಶನ್ ಧ್ರುವನಾರಾಯಣ ಅವರ ಬೆಂಬಲಿಸಲು ಮುಂದಾಗಿದೆ.
Advertisement