ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜಿನಾಮೆ: ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ!
ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ವಿಧಾನಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿದ ಲಕ್ಷ್ಮಣ್ ಸವದಿ ಅವರು ರಾಜಿನಾಮೆ ಪತ್ರವನ್ನ ನೀಡಿದ್ದಾರೆ. ಈ ವೇಳೆ ಯಾವುದಾದರೂ ರಾಜಕೀಯ ಒತ್ತಡಕ್ಕೆ ಸಿಲುಕಿ ರಾಜಿನಾಮೆ ನೀಡುತ್ತಿದ್ದೀರಾ ಎಂದು ಸಭಾಪತಿಗಳು ಪ್ರಶ್ನಿಸಿದ್ದು ಇದಕ್ಕೆ ನಾನು ಸ್ವಹಿಚ್ಛೆಯಿಂದ ರಾಜಿನಾಮೆ ನೀಡುತ್ತಿರುವುದಾಗಿ ಸವದಿ ಹೇಳಿದರು.
ಇದಕ್ಕೂ ಮುನ್ನ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದರು. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಲಕ್ಷ್ಮಣ್ ಸವದಿ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕೈ ನಾಯಕರು ಆಗಲಿ ಎಂದಿದ್ದಾರೆ ಎಂದು ಸವದಿ ಹೇಳಿದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಸವದಿ ಹೇಳಿದ್ದಾರೆ.
ಲಕ್ಷ್ಮಣ್ ಸವದಿ ಅವರು ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ