
ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೀಡಿರುವ ಎರಡು ದಿನಗಳ ಗಡುವು ಶನಿವಾರ ಕೊನೆಗೊಳ್ಳಲಿದ್ದು, ಮುಂದಿನ ನಡೆ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಶೆಟ್ಟರ್ ಅವರು ಟಿಕೆಟ್ ನೀಡದಿದ್ದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದು ನಾನೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಶೆಟ್ಟರ್ ಅವರು ಕೇಸರಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾದ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದಾರೆ.
ಮೂಲಗಳ ಪ್ರಕಾರ, ಮಾಜಿ ಸಚಿವ ಹಾಗೂ ಹಿರಿಯ ನಾಯಕರಾದ ಕೆಎಸ್ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಂತೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವಂತೆ ಹೈಕಮಾಂಡ್ ಹೇಳುತ್ತಿದೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಮಾತನಾಡಿದ ಶೆಟ್ಟರ್, ಜೆಪಿ ನಡ್ಡಾ ಅವರೊಂದಿಗೆ ಮಾತನಾಡಿದ್ದೇನೆ. ನಾನು ಎಲ್ಲವನ್ನೂ ಅವರೊಂದಿಗೆ ಹಂಚಿಕೊಂಡಿದ್ದೇನೆ. ಅವರು ಎಲ್ಲವನ್ನೂ ಆಲಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ನೀಡುವಂತೆ ಕೇಳಿದ್ದೆ. ಟಿಕೆಟ್ ನೀಡದಿದ್ದರೆ, 'ನಾನು ನನ್ನ ಬೆಂಬಲಿಗರ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತೇನೆ. ಮುಂದಿನ ಕ್ರಮದ ಬಗ್ಗೆ ನಾನು ನಿರ್ಧರಿಸುತ್ತೇನೆ' ಎಂದು ಅವರು ಹೇಳಿದ್ದರು.
ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸೇರಿದ 16 ಸದಸ್ಯರು ಹೈಕಮಾಂಡ್ ನಡೆ ಖಂಡಿಸಿ ರಾಜೀನಾಮೆ ಸಲ್ಲಿಸಿದ್ದರು.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷವು ಅವರಿಗೆ ಟಿಕೆಟ್ ಘೋಷಿಸಿದ್ದು, ಅವರ ಗೌರವ ಮತ್ತು ಘನತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದೆ.
ಬಿಜೆಪಿ ಕಚೇರಿ ಬಳಿ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯದಂತೆ ತಮ್ಮ ಬೆಂಬಲಿಗರಿಗೆ ಹೇಳುವುದಾಗಿ ಸವದಿ ಹೇಳಿದ್ದಾರೆ. ಈ ಬೆಳವಣಿಗೆ ಕರ್ನಾಟಕ ಬಿಜೆಪಿ ಘಟಕಕ್ಕೆ ಹಿನ್ನಡೆಯಾಗಿದೆ.
ಶೆಟ್ಟರ್ ಅವರನ್ನು ಬಿಜೆಪಿ ಕಳೆದುಕೊಂಡರೆ, ಅದು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕಾಂಗ್ರೆಸ್ ಕೂಡ ಈ ಬೆಳವಣಿಗಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
Advertisement