ಬಿಜೆಪಿ ಪರ ಸ್ಟಾರ್ ಪ್ರಚಾರಕರ ದಂಡು: ಅನ್ಯ ರಾಜ್ಯಗಳ ಫೈರ್ ಬ್ರಾಂಡ್ ರಾಜಕಾರಣಿಗಳಿಂದ ಕ್ಯಾಂಪೇನ್!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿ  ಶೀಘ್ರದಲ್ಲೇ ರಾಜ್ಯದಲ್ಲಿ ಹಲವು ತಂತ್ರಗಳನ್ನು ರೂಪಿಸುತ್ತಿದೆ.
ಬಿಜೆಪಿ ಸ್ಟಾರ್ ಪ್ರಚಾರಕರು
ಬಿಜೆಪಿ ಸ್ಟಾರ್ ಪ್ರಚಾರಕರು

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿ  ಶೀಘ್ರದಲ್ಲೇ ರಾಜ್ಯದಲ್ಲಿ ಹಲವು ತಂತ್ರಗಳನ್ನು ರೂಪಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ, ಪ್ರಮುಖ ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರು ರಾಜ್ಯಾದ್ಯಂತ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 21 ಮತ್ತು 22 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೇವನಹಳ್ಳಿ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಬಿಜೆಪಿ ತನ್ನ ರಾಷ್ಟ್ರೀಯ ನಾಯಕರನ್ನು, ವಿಶೇಷವಾಗಿ ಮೋದಿ, ಶಾ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮೇಲೆ ಅವಲಂಬಿತವಾಗಿದೆ.

ಪಕ್ಷದ 94 ರಾಷ್ಟ್ರೀಯ ನಾಯಕರು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ಬಿಜೆಪಿ ರಾಜ್ಯ ಕಾರ್ಯದರ್ಶಿ ಎನ್ ರವಿಕುಮಾರ್, ರಾಜ್ಯಾದ್ಯಂತ ಕನಿಷ್ಠ 1,000 ರೋಡ್‌ಶೋಗಳು, ರ್ಯಾಲಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ರಾಜ್ಯದ ವಿವಿಧ ಪ್ರದೇಶಗಳಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬರಲಿದ್ದಾರೆ. ಮೋದಿ ಅವರು ಕನಿಷ್ಠ 20 ರ್ಯಾಲಿಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮೊದಲ 10 ದಿನಗಳಲ್ಲಿ ನಾಯಕರು 150 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ.  ಪ್ರಚಾರದ ಕೊನೆಯ ದಿನಾಂಕದ ಮೊದಲು ಅವರು ಇಡೀ ರಾಜ್ಯವನ್ನು  ಸಂಚರಿಸಲಿದ್ದಾರೆ ಎಂದು ರವಿಕುಮಾರ್ ಹೇಳಿದರು.ಕೆಲವು ಕ್ಷೇತ್ರಗಳಲ್ಲಿ ಪಕ್ಷವು ಹಿಂದುಳಿದಿರುವಂತೆ ತೋರುತ್ತಿದೆ. ಆದರೆ ಸ್ಟಾರ್ ಪ್ರಚಾರಕರು ಬೀದಿಗಿಳಿದ ನಂತರ ಅದು ಬದಲಾಗುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಬಿಜೆಪಿ ನಾಯಕರ ಪ್ರಕಾರ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಬಿಜೆಪಿ ಭವಿಷ್ಯಕ್ಕೆ ಧಕ್ಕೆಯಾಗುತ್ತಿತ್ತು. ಆದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಈಗ ಸಮಸ್ಯೆಯಾಗುವುದಿಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಶಾ, ಪ್ರಲ್ಹಾದ್ ಜೋಶಿ, ಮನ್ಸುಖ್ ಮಾಂಡವಿಯಾ ಮತ್ತು ನಿರ್ಮಲಾ ಸೀತಾರಾಮನ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.

ಇತರ ಸ್ಟಾರ್ ಪ್ರಚಾರಕರಲ್ಲಿ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ರಾಜನಾಥ್ ಸಿಂಗ್, ಶೋಭಾ ಕರಂದ್ಲಾಜೆ ಮತ್ತು ಎ ನಾರಾಯಣಸ್ವಾಮಿ, ಯೋಗಿ ಆದಿತ್ಯನಾಥ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಸೇರಿದ್ದಾರೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಬಿ ಶ್ರೀರಾಮುಲು, ಗೋವಿಂದ್ ಕಾರಜೋಳ, ಸಂಸದ ಜಗ್ಗೇಶ್, ಮಾಜಿ ಎಂಎಲ್ ಸಿ ತಾರಾ ಅನುರಾಧ, ಶೃತಿ ಪ್ರಚಾರ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com