ಸಂಪುಟದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಹಿರಿಯ ಸಚಿವರಿಗೆ ಮುನಿಯಪ್ಪ ಸಲಹೆ!

ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಸಂಪುಟದ ಹಿರಿಯ ಸಚಿವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕೆ.ಹೆಚ್. ಮುನಿಯಪ್ಪ
ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಸಂಪುಟದ ಹಿರಿಯ ಸಚಿವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಮತ್ತು ಡಿಸಿಎಂ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ಸಚಿವ ಸಂಪುಟಕ್ಕೆ ಮೊದಲ ಬಾರಿಗೆ ಪ್ರವೇಶಿಸಿದವರನ್ನು ಹೊರತುಪಡಿಸಿ ಉಳಿದವರಿಗೆ ದಾರಿ ಮಾಡಿಕೊಟ್ಟರೆ ಒಳ್ಳೆಯದು, ಇದರಿಂದ ಇತರರಿಗೂ ಅವಕಾಶ ಸಿಗುತ್ತದೆ ಎಂಬ ಅವರ ಹೇಳಿಕೆಗೆ ಸಭೆಯಲ್ಲಿ ಪಾಲ್ಗೊಂಡಿದ್ದವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ್ದಾರೆ. 

ಮುನಿಯಪ್ಪ ಅವರ ಹೇಳಿಕೆಯು ಕಾಂಗ್ರೆಸ್ ಸರ್ಕಾರದ ಮೊದಲಾರ್ಧದ ನಂತರ ಸರ್ಕಾರದಲ್ಲಿನ ಸಚಿವರ ಸಂಭವನೀಯ ಬದಲಾವಣೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಮುನಿಯಪ್ಪ ಹೇಳಿಕೆಯಿಂದ ಮುಖ್ಯಮಂತ್ರಿ ಸ್ಥಾನದ ಹಂಬಲದಲ್ಲಿರುವವರು ಹಾಗೂ ಅವರ ಬೆಂಬಲಿಗರು ಸಂತಸಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನೂ ಮಂಡಳಿ ಮತ್ತು ನಿಗಮಗಳಿಗೆ ನಾಮನಿರ್ದೇಶನ ಮಾಡಲು ಪರಿಗಣಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಸಿಎಂ ಮತ್ತು ಡಿಸಿಎಂ ನೇಮಕಕ್ಕೂ ಮುನ್ನಾ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ನಾಯಕರು ಸಿದ್ದರಾಮಯ್ಯ ಹಾಗೂ ತಮ್ಮೊಂದಿಗೆ ಸಭೆ ನಡೆಸಿರುವುದಾಗಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೇಳಿದ್ದರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಏರ್ಪಟ್ಟಿದ್ದ ಪೈಪೋಟಿಯನ್ನು ಹೈಕಮಾಂಡ್ ಶಾಂತಯುತವಾಗಿ ಬಗೆಹರಿಸಿದೆ ಎಂಬುದನ್ನು ಪರೋಕ್ಷವಾಗಿ ಅವರು ಉಲ್ಲೇಖಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com