ವಿಶ್ರಾಂತಿ ಪಡೆಯುವ ಸಮಯವಲ್ಲ, ವಿಧಾನಸಭಾ ಚುನಾವಣೆಯಲ್ಲಿ ತೋರಿದ ಉತ್ಸಾಹ ಲೋಕಸಭೆಯಲ್ಲೂ ತೋರಿಸಿ: ಸಿಎಂ

ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಮೋಘ ಗೆಲುವನ್ನು ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ  ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಸಮಿತಿಯ ಸಾಮಾನ್ಯ ಸಭೆ
ಕಾಂಗ್ರೆಸ್ ಸಮಿತಿಯ ಸಾಮಾನ್ಯ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಮೋಘ ಗೆಲುವನ್ನು ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ  ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾವು ಕನಿಷ್ಠ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾನು ಹೈಕಮಾಂಡ್‌ಗೆ ಭರವಸೆ ನೀಡಿರುವುದರಿಂದ ನಮ್ಮ ಕಾರ್ಯಕರ್ತರು ವಿಶ್ರಾಂತಿ ಪಡೆಯಬಾರದು. ನಾನು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ನಾನು ಅನುಭವದಿಂದ ಹೇಳುತ್ತಿದ್ದೇನೆ,  2024ರಲ್ಲಿ ಬಿಜೆಪಿ ಸೋಲುತ್ತದೆ ಎಂದು ಯಾವುದೇ ಉತ್ಪ್ರೇಕ್ಷೆಯಿಲ್ಲದೆ ಹೇಳುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಅಧಿವೇಶನಗಳಿಗೆ ಸರಿಯಾಗಿ ಹಾಜರಾಗಿಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ. ಅವರು ಕೇವಲ 'ಮನ್ ಕಿ ಬಾತ್' ಮಾಡುತ್ತಾರೆ ಆದರೆ ಜನರ ಸಮಸ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮೋದಿ ರೋಡ್‌ಶೋ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ, ಆದರೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸಾಗಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ತಿಳಿಸಿದರು.

ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಐದು ಖಾತ್ರಿಗಳನ್ನು ಕಾರ್ಯಕರ್ತರು ಸದುಪಯೋಗಪಡಿಸಿಕೊಳ್ಳಬೇಕು, ವಿಶೇಷವಾಗಿ ‘ಗೃಹ ಲಕ್ಷ್ಮಿ’ ಅತಿ ದೊಡ್ಡ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಪ್ರತೀ ಬೂತ್‌ ಮಟ್ಟದಲ್ಲೂ ಯಾರಿಗಾದರೂ ಅರ್ಹ ಫಲಾನುಭವಿಗೆ ಯೋಜನೆ ತಲುಪಿಲ್ಲ ಎಂದರೆ ಅವರ ಮನೆಗೆ ತಲುಪಿಸುವುದು ಕಾರ್ಯಕರ್ತರ ಕರ್ತವ್ಯ ಎಂದು ತಿಳಿಸಿದ್ದಾರೆ. ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಕ್ತಾರರಿದ್ದಂತೆ ಎಂದ ಅವರು, ಸರ್ಕಾರದ ಭ್ರಷ್ಟಾಚಾರದ ಕುರಿತು ಪೆನ್‌ಡ್ರೈವ್‌ ಹೊಂದಿದ್ದಾರೆ ಎಂಬ ಅವರ ಮಾತು ಸುಳ್ಳು ಎಂದು ತಿಳಿಸಿದರು.

ತಮ್ಮ ಸರ್ಕಾರದ ಅಡಿಯಲ್ಲಿ ನಡೆದ ಹಗರಣಗಳ ತನಿಖೆಯ ವರದಿಗಳು ಹೊರಬಂದ ನಂತರ ಅವರ ನಿಜ ಬಣ್ಣವು ತಿಳಿಯುತ್ತದೆ ಎಂದು ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ. ಅದಕ್ಕಾಗಿಯೇ ಅವರು ಆಡಳಿತ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ನಾವು 42.8% ಮತಗಳನ್ನು ಪಡೆದಿದ್ದೇವೆ. ಬಿಜೆಪಿಯ ವಿನಾಶಕಾರಿ ಸಿದ್ಧಾಂತ ಮತ್ತು ಹಿಂದುಳಿದ ಅಭಿವೃದ್ಧಿ, ಬೆಲೆ ಏರಿಕೆ, ನಿರುದ್ಯೋಗ, ದುರಾಡಳಿತ ಮತ್ತು ದ್ವೇಷದ ಆಧಾರದ ಮೇಲೆ ಜನರನ್ನು ವಿಭಜಿಸುವ ರಾಜಕೀಯವನ್ನು ತಿರಸ್ಕರಿಸಿದ ಕರ್ನಾಟಕದ ಜನರು ದೇಶವನ್ನು ಉಳಿಸುವ ನಿಟ್ಟಿನಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com