ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಮುಕ್ತವಾಗಲಿದೆ: ಮಾಜಿ ಸಚಿವ ರೇಣುಕಾಚಾರ್ಯ

ಕರ್ನಾಟಕ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ರೇಣುಕಾಚಾರ್ಯ
ರೇಣುಕಾಚಾರ್ಯ

ದಾವಣಗೆರೆ: ಕರ್ನಾಟಕ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಅವರು, ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ. ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ, ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ. ರಾಜ್ಯ ಬಿಜೆಪಿ ಮುಖ್ಯವಾಗಲಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ತಮ್ಮ ಕ್ಷೇತ್ರಕ್ಕೆ ಯೋಜನೆಗಳನ್ನು ಪಡೆಯಲು ಅವರನ್ನು ಭೇಟಿ ಮಾಡಿರುವುದಾಗಿ ತಿಳಿಸಿದರು.

ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯೇ ಇಲ್ಲ ಎಂದು ಆರೋಪಿಸಿದ ಮಾಜಿ ಸಚಿವ, ಪಕ್ಷವನ್ನು ದೂರದ ಸ್ಥಳದಲ್ಲಿದ್ದುಕೊಂಡು ಯಾರೋ ನಿಯಂತ್ರಿಸುತ್ತಾರೆ. ಇದೇ ರೀತಿ ಮುಂದುವರಿದರೆ ಪಕ್ಷ ಸರ್ವನಾಶವಾಗಲಿದೆ ಎಂದರು.

ಬಿಜೆಪಿ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದು, ಇದರಿಂದ ಮೊದಲು ಹೊರಬರಬೇಕು. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರ ಮನಸ್ಸಿಗೆ ಬಹಳ ಬೇಸರವಾಗಿದೆ. ಕೆಲವರು ಪತ್ರಿಕಾ ಹೇಳಿಕೆ ನೀಡುವ ಟೈಗರ್ಸ್‍ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ ಆ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ ಎಂದರು.

ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತನಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತರಿಸುತ್ತಾರೆ. ಯಾರು ಬಕೆಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕ ಬಿವೈ ವಿಜಯೇಂದ್ರ ಅವರಿಗೆ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವಿದೆ. ಆದರೆ, ಅವರಿಗೆ ಅವಕಾಶ ಕೊಡುತಿಲ್ಲ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com