ವಿರೋಧ ಪಕ್ಷದ ನಾಯಕನ ವಿರುದ್ಧ ಶಾಸಕರ ಮುನಿಸು: ಅಸಮಾಧಾನ ತಣಿಸಲು ಅಶೋಕ್-ವಿಜಯೇಂದ್ರ ಕಸರತ್ತು!

ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರ ಮೇಲಿನ ಶಾಸಕರ ಮುನಿಸು ಎರಡನೇ ವಾರವೂ ಮುಂದುವರಿಯಲಿದೆಯೇ ಎಂಬ ಚರ್ಚೆ ಬಿಜೆಪಿಯಲ್ಲಿ ಆರಂಭವಾಗಿದೆ.
ಆರ್. ಅಶೋಕ್ ಮತ್ತು ವಿಜಯೇಂದ್ರ
ಆರ್. ಅಶೋಕ್ ಮತ್ತು ವಿಜಯೇಂದ್ರ

ಬೆಳಗಾವಿ: ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರ ಮೇಲಿನ ಶಾಸಕರ ಮುನಿಸು ಎರಡನೇ ವಾರವೂ ಮುಂದುವರಿಯಲಿದೆಯೇ ಎಂಬ ಚರ್ಚೆ ಬಿಜೆಪಿಯಲ್ಲಿ ಆರಂಭವಾಗಿದೆ. ವಿಧಾನಸಭೆಯಲ್ಲಿ ತಮ್ಮ ಕಾರ್ಯ ವೈಖರಿ ಬಗ್ಗೆ ತಮ್ಮದೇ ಶಾಸಕರಿಂದ ತೀವ್ರ ಟೀಕೆಗೆ ಒಳಗಾಗಿದ್ದ ಅಶೋಕ ಅವರು, ಸಿಟ್ಟಿಗೆದ್ದಿರುವ ಹಲವರನ್ನು ಸಂಪರ್ಕಿಸಿ ಸಮಾಧಾನಪಡಿಸುವ ಕಸರತ್ತು ನಡೆಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಜಂಟಿ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಒಂದು ವಾರದ ನಂತರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರ ನಡೆಯಲಿದ್ದು, ಪಕ್ಷದ ಶಾಸಕರು ಸಭೆಯಲ್ಲಿ ಪ್ರಸ್ತಾಪಿಸುವ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಬಸನಗೌಡ ಪಾಟೀಲ್ ಯತ್ನಾಳ್, ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಸೇರಿದಂತೆ ಕೆಲ ಶಾಸಕರು ಪಕ್ಷದ ಶಿಸ್ತಿಗೆ ಚ್ಯುತಿ ತರಲು ಅಸಹಕಾರ ತೋರಿದ್ದಾರೆ ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರನ್ನು ಸಮಾಧಾನ ಪಡಿಸಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯಾಗುವವರೆಗೂ ಯತ್ನಾಳ್ ಸಭೆಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಆರ್.ಅಶೋಕ ತಮ್ಮ ಧೋರಣೆ ಬದಲಿಸಿಕೊಳ್ಳಬೇಕು, ಕೆಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ಎಸ್.ಆರ್.ವಿಶ್ವನಾಥ್ ಸೇರಿದಂತೆ ಶಾಸಕರು ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆ ಇದೆ. ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣದ ತನಿಖೆಗೆ ಸರ್ಕಾರದ ಒಪ್ಪಂದವನ್ನು ಹಿಂತೆಗೆದುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ನಿರ್ಧಾರಕ್ಕೆ ಸಂಬಂಧಿಸಿದಂತೆ, ರಾಜಿ ಮಾಡಿಕೊಳ್ಳಬೇಡಿ ಎಂದು ಅಶೋಕ ಅವರಿಗೆ ನಾವು ಸಲಹೆ ನೀಡಲಿದ್ದೇವೆ ಎಂದು ಬಿಜೆಪಿ ಹಿರಿಯ ಶಾಸಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಮುಸ್ಲಿಂ ಯುಟಿ ಖಾದರ್ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ಮಾಡಿದೆ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸೇರಿದಂತೆ ಇತರ ವಿಷಯಗಳು ಪ್ರಸ್ತಾಪವಾಗಬೇಕಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ ಸರ್ಕಾರವು ಮುಸ್ಲಿಮರನ್ನು ಓಲೈಸುವುದು, ಏಕೆಂದರೆ ಸಿದ್ದರಾಮಯ್ಯ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುವುದಾಗಿ ಘೋಷಿಸಿದ್ದಾರೆ ಎಂದು ಅವರು ಹೇಳಿದರು.

ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಾವು ಪರಿಣಾಮಕಾರಿ ವಿರೋಧ ಪಕ್ಷದ ನಾಯಕ ಎಂದು ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರೊಂದಿಗೆ ಗುರುತಿಸಿಕೊಂಡಿರುವ ಕೆಲವು ಶಾಸಕರು ಆರ್ ಅಶೋಕ ಅವರನ್ನು ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಳ್ಳುವಂತೆ ಸಲಹೆ ನೀಡುವ ಸಾಧ್ಯತೆಯಿದೆ.

ಮಂಗಳವಾರದ ಬಿಜೆಪಿಎಲ್‌ಪಿ ಸಭೆಯ ನಂತರ, ಡಿ.4 ರಂದು ಆರಂಭವಾದ ಅಧಿವೇಶನವು ಡಿ.15 ರಂದು ಮುಕ್ತಾಯಗೊಳ್ಳುವುದರಿಂದ ಪ್ರಮುಖ ವಿರೋಧ ಪಕ್ಷ ಬಿಜೆಪಿಗೆ ತನ್ನ ಸಾಮರ್ಥ್ಯ ಸಾಬೀತುಪಡಿಸಲು ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿದೆ.

ಸೋಮವಾರ ಬಿ ವೈ ವಿಜಯೇಂದ್ರ ಮತ್ತು ಆರ್ ಅಶೋಕ ಇಬ್ಬರೂ ತಮ್ಮ ಪಕ್ಷದ ಶಾಸಕರಿಗೆ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಬುಧವಾರ ಅವರು ಪಕ್ಷದ ಶಾಸಕರಿಗೆ ಔತಣಕೂಟವನ್ನು ಆಯೋಜಿಸುತ್ತಿದ್ದಾರೆ, ಅಲ್ಲಿ ಅವರು ಒಟ್ಟಾಗಿ ಸೇರುತ್ತಾರೆ ಹೀಗಾಗಿ ಸ್ವಲ್ಪ ಮಟ್ಟಿಗೆ ಅವರ ನಡುವಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಆದರೆ 2024ರ ಲೋಕಸಭಾ ಚುನಾವಣೆಗೂ ಮುನ್ನ ಬರ ಸೇರಿದಂತೆ ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಬಿಜೆಪಿ ಛಾಪು ಮೂಡಿಸುವ ಅವಶ್ಯಕತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com