ಚಾಮರಾಜನಗರ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಶೀಘ್ರದಲ್ಲೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆದಿದೆ. ಅವರು ಸಹ ಜೆಡಿಎಸ್ ತೊರೆಯಲು ಸಿದ್ಧರಿದ್ದಾರೆ ಅಂತ ಧ್ರುವನಾರಾಯಣ್ ಹೇಳಿದ್ದಾರೆ.
ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬುದನ್ನು ಕಳೆದ ಭಾರಿಯೇ ಜನರು ಅರ್ಥ ಮಾಡಿಕೊಂಡಿದ್ದರು. ಈ ಭಾರಿಯೂ ಅರ್ಥ ಮಾಡಿಕೊಂಡಿದ್ದಾರೆ. ಇದು ರಾಜ್ಯದ ಜನರಿಗೂ ಗೊತ್ತಿದೆ. ಸ್ಥಳೀಯವಾಗಿ ವಿರೋಧ ಹೇಳಿಕೆ ಮಾತ್ರ ಕೊಟ್ಟಿರಬಹುದು ಎಂದು ಆರೋಪಿಸಿದರು.
ಮಾಜಿ ಸಚಿವ ಎ.ಮಂಜು ಕೆಪಿಸಿಸಿಗೆ ಅರ್ಜಿ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆ. ಶಾಸಕ ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಪಕ್ಷಕ್ಕೆ ಬರುವ ನಿರೀಕ್ಷೆಯಿದೆ. ಅರಕಲಗೂಡು ಶಾಸಕರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.
ಶಿವಲಿಂಗೇಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅಂತಿಮ ಹಂತದ ಕಸರತ್ತು ನಡೆಸುತ್ತಿರುವ ಶಾಸಕ ಎಚ್.ಡಿ. ರೇವಣ್ಣ, ಕ್ಷೇತ್ರದ ಕಾರ್ಯಕರ್ತರಿಂದಲೇ ಶಿವಲಿಂಗೇಗೌಡರಿಗೆ ಮನವಿ ಮಾಡಿಸಿದ್ದಾರೆ. ಅದಾಗ್ಯೂ ಶಿವಲಿಂಗೇಗೌಡರು ಪಕ್ಷ ತ್ಯಜಿಸುವ ನಿರ್ಧಾರ ಪ್ರಕಟಿಸಿದರೆ, ತಕ್ಕ ಪಾಠ ಕಲಿಸುವ ಯೋಜನೆಯನ್ನೂ ರೂಪಿಸಿದ್ದಾರೆ.
ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾದರೆ, ಸಂಸದ ಪ್ರಜ್ವಲ್ ರೇವಣ್ಣ ಅರಸೀಕೆರೆಯ ಜೆಡಿಎಸ್ ಅಭ್ಯರ್ಥಿಯಾಗುವುದು ನಿಶ್ಚಿತ ಎನ್ನಲಾಗುತ್ತಿದೆ. ಈಗಾಗಲೇ ಅರಸೀಕೆರೆಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಜ್ವಲ್ ರೇವಣ್ಣ ಅವರನ್ನೇ ಕಣಕ್ಕೆ ಇಳಿಸುವಂತೆ ಜೆಡಿಎಸ್ ಕಾರ್ಯಕರ್ತರು ಸಲಹೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Advertisement