ಬೆಂಗಳೂರು: ಸೋಮವಾರ ಮತ್ತು ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ವಿಧಾನಸಬಾ ಚುನಾವಣೆ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.
ದೆಹಲಿಯ ಎನ್ಡಿಎಂಸಿ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ಚುನಾವಣೆಯ ಕೇಂದ್ರಬಿಂದುವಾಗಿರಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಸಭೆ ನಡೆಯುವ ಸ್ಥಳದವರೆಗೂ ರೋಡ್ ಶೋ ಕೂಡ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ ವಿ ರಾಜೇಶ್ ಈಗಾಗಲೇ ದೆಹಲಿಗೆ ತೆರಳಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಕೂಡ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ ಎನ್ನಲಾಗುತ್ತಿದೆ.
ಚುನಾವಣಾ ಸಿದ್ಧತೆ ಕುರಿತು ಮಾಹಿತಿಗಾಗಿ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ತಂಡದೊಂದಿಗೆ ವಿವರವಾದ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪಂಚಮಸಾಲಿಗಳಿಗೆ ಮೀಸಲಾತಿ, ಹಳೇ ಮೈಸೂರಿನಲ್ಲಿ ಪಕ್ಷದ ಬಲ, ಸಂಘಟನಾ ಶಕ್ತಿ ಮುಂತಾದ ಪ್ರಮುಖ ವಿಷಯಗಳೂ ಚರ್ಚೆಗೆ ಬರುವ ನಿರೀಕ್ಷೆಯಿದೆ.
ಈ ವರ್ಷ ಒಂಬತ್ತು ರಾಜ್ಯಗಳು ಚುನಾವಣೆಯನ್ನು ಎದುರಿಸುತ್ತಿದ್ದು ಈ ನಡುವಲ್ಲೂ ಬಿಜೆಪಿಗೆ ಕರ್ನಾಟಕದ ಕುರಿತ ಚಿಂತೆ ಹೆಚ್ಚಾಗಿದೆ. ಏಕೆಂದರೆ ದಕ್ಷಿಣದಲ್ಲಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟವಾಗಿದೆ. ಹೀಗಾಗಿ ಕರ್ನಾಟಕದಲ್ಲ ಶತಾಯಗತಾಯವಾಗಿ ಆದರೂ ಗೆಲುವು ಸಾಧಿಸಲು ಯತ್ನ ನಡೆಸುತ್ತಿದೆ.
Advertisement