ಉಪಾಹಾರ ಕೂಟದಲ್ಲಿ ಅಮಿತ್ ಶಾಗೆ ಸ್ವತಃ ತಿಂಡಿ ಬಡಿಸಿದ ಬಿ ವೈ ವಿಜಯೇಂದ್ರ ಹೇಳಿದ್ದೇನು?

ಇಂದು ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಉಪಾಹಾರ ಸೇವನೆಗೆ ಬಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ ವೈ ವಿಜಯೇಂದ್ರ ಜೊತೆಗೆ ನಡೆದುಕೊಂಡ ಆಪ್ತತೆಯ ರೀತಿ, ನೀಡಿರುವ ಪ್ರಾಮುಖ್ಯತೆ ಬಗ್ಗೆ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಅಮಿತ್ ಶಾ ಅವರಿಗೆ ತಿಂಡಿ ಬಡಿಸುತ್ತಿರುವ ಬಿ ವೈ ವಿಜಯೇಂದ್ರ
ಅಮಿತ್ ಶಾ ಅವರಿಗೆ ತಿಂಡಿ ಬಡಿಸುತ್ತಿರುವ ಬಿ ವೈ ವಿಜಯೇಂದ್ರ
Updated on

ಬೆಂಗಳೂರು: ಇಂದು ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಉಪಾಹಾರ ಸೇವನೆಗೆ ಬಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ ವೈ ವಿಜಯೇಂದ್ರ ಜೊತೆಗೆ ನಡೆದುಕೊಂಡ ಆಪ್ತತೆಯ ರೀತಿ, ನೀಡಿರುವ ಪ್ರಾಮುಖ್ಯತೆ ಬಗ್ಗೆ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಫೋಟೋ, ವಿಡಿಯೊಗಳು ಸಾಕಷ್ಟು ಹರಿದಾಡುತ್ತಿವೆ.

ಇಂದು ಬೆಳಗ್ಗೆ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಖುದ್ದು ಬಿ ವೈ ವಿಜಯೇಂದ್ರ ಅವರೇ ಪೊಂಗಲ್​, ಉಪ್ಪಿಟ್ಟು, ರಸ್ ಮಲಾಯ್ ಖಾದ್ಯಗಳನ್ನು ಬಡಿಸಿದರು. ಉಪಾಹಾರ ಕೂಟದಲ್ಲಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​​ ಕಟೀಲ್​, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು. ಉಪಹಾರ ಸವಿದ ಅಮಿತ್ ಶಾ ಜತೆಗೆ ಯಡಿಯೂರಪ್ಪ ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದರು. ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದು ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಣತಂತ್ರದ ಮಾತುಕತೆ ಮಾಡಿದರು ಎಂದು ತಿಳಿದುಬಂದಿದೆ.

ಉಪಾಹಾರ ಕೂಟ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಅಮಿತ್ ಶಾ ನನ್ನನ್ನು ಮಾತನಾಡಿಸಿದ್ದು, ಆಪ್ತತೆಯಿಂದ ಬರಮಾಡಿಕೊಂಡಿದ್ದು, ಬೆನ್ನುತಟ್ಟಿದ್ದು ಶಕ್ತಿ ಮತ್ತು ಸ್ಪೂರ್ತಿ ಸಿಕ್ಕಂತಾಗಿದೆ. ಪಕ್ಷದ ಕೆಲಸ ಮಾಡಲು ಇನ್ನಷ್ಟು ಹುರುಪು ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಮಿತ್ ಶಾ ನಮ್ಮ ಮನೆಗೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರು, ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತಂತ್ರ ಸೃಷ್ಟಿಸಲು ಬಿಡಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನ ಮನೆ ಮನೆಗೆ ತಲುಪಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಬಿಎಸ್​ವೈ, ಅಮಿತ್ ಶಾ ನಡುವೆ ರಾಜಕೀಯ ಬಿಟ್ಟು ಬೇರೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಮಾಡಬೇಕು. ಈಗಾಗಲೇ ನಾನು ಶಿಕಾರಿಪುರ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಶೀಘ್ರದಲ್ಲೇ ಶಿಕಾರಿಪುರದಲ್ಲಿ ಮತ್ತೊಂದು ಸುತ್ತಿನ ಪ್ರವಾಸ ಆರಂಭಿಸುತ್ತೇನೆ.

ಯಡಿಯೂರಪ್ಪನವರನ್ನು ಕಡೆಗಣಿಸಿಲ್ಲ: ನಮ್ಮ ತಂದೆ ಯಡಿಯೂರಪ್ಪನವರನ್ನು ಬಿಜೆಪಿ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ, ಪ್ರಾಮುಖ್ಯತೆ ನೀಡುತ್ತಿಲ್ಲ, ಅವರನ್ನು ಹೈಕಮಾಂಡ್ ಸೈಡ್ ಲೈನ್ ಮಾಡುತ್ತಿದೆ ಎಂಬಿತ್ಯಾದಿ ಮಾತುಗಳು, ಚರ್ಚೆಗಳೆಲ್ಲವೂ ಸುಳ್ಳು. ಯಡಿಯೂರಪ್ಪನವರಿಗೆ ಪಕ್ಷದಲ್ಲಿ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡುತ್ತಿದೆ ಎಂದರು.

ಇಂದಿನ ಉಪಾಹಾರ ಕೂಟದಲ್ಲಿ ಅಮಿತ್ ಶಾ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿರುವುದು ಎಲ್ಲರಿಗೂ ಅಚ್ಚರಿ ಮತ್ತು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com