ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ಬೆಂಗಳೂರು ಬಿಡಿಸಲಾರದ ಒಗಟು, ಮೂಲ-ವಲಸಿಗರ ನಡುವೆ ಕಾದಾಟ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಅಧಿಕಾರದ ಕೀಲಿಕೈ ರಾಜಧಾನಿಯಲ್ಲಿದೆ ಎಂಬುದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ತಿಳಿದಿದೆ. ಮೂಲ ಮತ್ತು ಹೊರಗಿನವರ ಜಗಳದಿಂದ ನಲುಗಿರುವ ಉಭಯ ಪಕ್ಷಗಳು ಕರ್ನಾಟಕದಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಬೆಂಗಳೂರನ್ನು ವಶಪಡಿಸಿಕೊಳ್ಳಲು ಶ್ರಮಿಸುತ್ತಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಇನ್ನೇನು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಅಧಿಕಾರದ ಕೀಲಿಕೈ ರಾಜಧಾನಿಯಲ್ಲಿದೆ ಎಂಬುದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ತಿಳಿದಿದೆ. ಮೂಲ ಮತ್ತು ವಲಸಿಗರ ಜಗಳದಿಂದ ನಲುಗಿರುವ ಉಭಯ ಪಕ್ಷಗಳು ಕರ್ನಾಟಕದಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಬೆಂಗಳೂರನ್ನು ವಶಪಡಿಸಿಕೊಳ್ಳಲು ಶ್ರಮಿಸುತ್ತಿವೆ.

ಬೆಂಗಳೂರಿನಲ್ಲಿ ಯಾರು ಹೆಚ್ಚು ಸ್ಥಾನ ಗಳಿಸುತ್ತಾರೋ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಾರೆ ಎಂಬ ನಂಬಿಕೆ ಇದೆ. 2008 ರಲ್ಲಿ ಬೆಂಗಳೂರಿನಲ್ಲಿ ಬಿಜೆಪಿ 17, ಕಾಂಗ್ರೆಸ್ 10 ಮತ್ತು ಜೆಡಿಎಸ್ 1 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದಿತ್ತು. 2013 ರ ಚುನಾವಣೆಯಲ್ಲಿ ಕಾಂಗ್ರೆಸ್ 14, ಬಿಜೆಪಿ 12 ಮತ್ತು ಜೆಡಿಎಸ್ 2 ಸ್ಥಾನಗಳನ್ನು ಗೆದ್ದು ನಂತರ ಕಾಂಗ್ರೆಸ್ ಸರ್ಕಾರ ರಚಿಸಿತು. 2018ರಲ್ಲಿ ಕಾಂಗ್ರೆಸ್ 14, ಬಿಜೆಪಿ 11 ಮತ್ತು ಜೆಡಿಎಸ್ ಮೂರು ಸ್ಥಾನಗಳನ್ನು ಗೆದ್ದಿದ್ದವು.

ಈ ವೇಳೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿತ್ತು. ಆದರೆ, 2019 ರಲ್ಲಿ ಕಾಂಗ್ರೆಸ್-ಜೆಡಿಎಸ್‌ನ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಯಾದಾಗ, ಉಪಚುನಾವಣೆ ನಡೆಯುವಂತಾಯಿತು. ಆಗ ಬಿಜೆಪಿಗೆ 15, ಕಾಂಗ್ರೆಸ್‌ಗೆ 11 ಮತ್ತು ಜೆಡಿಎಸ್‌ಗೆ 2 ಸ್ಥಾನಗಳನ್ನು ನೀಡಿತು. ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು.

28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ಎಲ್ಲಾ ರಾಜಕೀಯ ಪಕ್ಷಗಳಿಗೂ ನಿರ್ಣಾಯಕವಾಗಿದೆ. ಆದಾಗ್ಯೂ, ಬೆಂಗಳೂರಿನಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಸವಾಲಿನ ಕೆಲಸವಾಗಿದೆ. ಏಕೆಂದರೆ, ಹಲವು ಕ್ಷೇತ್ರಗಳಲ್ಲಿ ಮೂಲ ಮತ್ತು ವಲಸಿಗ ಶಾಸಕರು ಇದ್ದಾರೆ. ಇದು ಪಕ್ಷದ ಹಳೆಯ ಮತ್ತು ಹೊಸ ನಾಯಕರ ನಡುವೆ ಪಕ್ಷದಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ.

2019ರ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ, ಎಸ್‌ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಮತ್ತು ಕೆ. ಗೋಪಾಲಯ್ಯ ಪಕ್ಷದ ಅಭ್ಯರ್ಥಿಗಳಾಗಿರುವುದರಿಂದ ಕೆಲವು ಕ್ಷೇತ್ರಗಳಲ್ಲಿ ಮೂಲ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದು ಪಕ್ಷದೊಳಗೆ ಘರ್ಷಣೆಗೆ ಕಾರಣವಾಗಿದೆ. 

'2019 ರಲ್ಲಿ, ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಚುನಾವಣೆಗಳು ನಡೆದಿದ್ದರಿಂದ ನಾವು ಪಕ್ಷಾಂತರ ನಾಯಕರಿಗಾಗಿ ಕೆಲಸ ಮಾಡಿದ್ದೇವೆ. ನಾವು 2018ರಲ್ಲಿ ಇದೇ ಪಕ್ಷಾಂತರಿಗಳ ವಿರುದ್ಧ ಕೆಲಸ ಮಾಡಿದ್ದೇವು. ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು 2023 ರಲ್ಲಿ ಮತ್ತೆ ಅವರ ಪರವಾಗಿ ಕೆಲಸ ಮಾಡಲು ಸಂತೋಷಪಡುವುದಿಲ್ಲ' ಎಂದು ತಮ್ಮ ಹೆಸರು ಹೇಳಲಿಚ್ಛಿಸದ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದರು.

ಕಾಂಗ್ರೆಸ್ ಕೂಡ ಇದೇ ಪರಿಸ್ಥಿತಿ ಎದುರಿಸುತ್ತಿದೆ. ರಾಜಾಜಿನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ ಎಂಎಲ್‌ಸಿ ಪುಟ್ಟಣ್ಣ ಅವರ ಹೆಸರು ಘೋಷಣೆ ಮಾಡಲಾಗಿದ್ದು, ಇದೀಗ ಅಸಮಾಧಾನ ಶುರುವಾಗಿದೆ. ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಉಪಮೇಯರ್ ಬಿಎಸ್ ಪುಟ್ಟರಾಜು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬೆದರಿಕೆಯನ್ನೂ ಒಡ್ಡಿದ್ದಾರೆ. ಅಲ್ಲದೆ, ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಹಾಗೂ ಅವರ ಬೆಂಬಲಿಗರು ಕೂಡ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಜಿ ಮೇಯರ್ ಸಂಪತ್ ರಾಜ್ ಪರ ಒಲವು ತೋರಿದ್ದಾರೆ. ಅಖಂಡ ಮನೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಶಿವಾಜಿನಗರದಿಂದ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಈ ಹಿಂದೆ ಆಗಿನ ಶಾಸಕ ರೋಷನ್ ಬೇಗ್ ಪರ ಕೆಲಸ ಮಾಡುತ್ತಿದ್ದ ಕಾಂಗ್ರೆಸ್‌ನ ಒಂದು ವರ್ಗದ ಕಾರ್ಯಕರ್ತರು ಅಸಮಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com