ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಸಿದ್ದರಾಮಯ್ಯ, ಡಿಕೆಶಿ ಭವಿಷ್ಯ ಏನಾಗಲಿದೆ?

ಈ ಬಾರಿಯ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ಕೆಲ ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದಿವೆ. ಹೀಗಿರುವಾಗ, ಭಾನುವಾರ ಸಂಜೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ. 
ಸಿದ್ದರಾಮಯ್ಯ - ಡಿಕೆ ಶಿವಕುಮಾರ್
ಸಿದ್ದರಾಮಯ್ಯ - ಡಿಕೆ ಶಿವಕುಮಾರ್
Updated on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ದಿನಗಳಷ್ಟೇ ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಕೇಂದ್ರ ನಾಯಕರನ್ನು ಕರೆತಂದು ಪ್ರಚಾರ ಮಾಡಿಸುತ್ತಿವೆ. ಈ ಬಾರಿಯ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ಕೆಲ ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದಿವೆ. ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. 

ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್‌ ಪೋಲ್‌ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗಿದೆ. ಆದರೆ, ಬಿಜೆಪಿ ನಿರೀಕ್ಷೆಗೂ ಮೀರಿ ನೆಲಕಚ್ಚಲಿದೆ ಎಂದು ಶನಿವಾರ ಬಿಡುಗಡೆಯಾದ ಸಮೀಕ್ಷೆ ತಿಳಿಸಿತ್ತು.

ಹೀಗಿರುವಾಗ, ಭಾನುವಾರ ಸಂಜೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ. 

ರಾಜ್ಯ ರಾಜಕೀಯದಲ್ಲಿ ಈ ಭಾರಿಯ ಚುನಾವಣೆಯಲ್ಲಿ ಗಮನ ಸೆಳೆದ ಕ್ಷೇತ್ರಗಳೆಂದರೆ ವರುಣಾ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳಾಗಿದ್ದವು. ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಸತಿ ಸಚಿವ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದು, ಕನಕಪುರದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಇನ್ನೊಂದೆಡೆ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಸಿದೆ. 

ಸೌತ್ ಫಸ್ಟ್ ಸಮೀಕ್ಷೆಯ ಪ್ರಕಾರ, ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗೆಲುವು ಸಾಧಿಸಲಿದ್ದಾರೆ ಎಂದಿದೆ. ಕನಕಪುರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆಲುವುದು ಸಾಧಿಸಲಿದ್ದಾರೆ ಎಂದಿದ್ದು, ಬಿಜೆಪಿಗೆ ಮುಖಭಂಗವಾಗಿದೆ. ಇನ್ನು ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಅವರು ಬಿಜೆಪಿ ಎದುರು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದೆ.

ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 105 ರಿಂದ 117 ಸ್ಥಾನಗಳನ್ನು ಗೆಲ್ಲಬಹುದು ಎಂದು ಯೋಜಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಜನರು ಒಲವು ತೋರಿಸಿದ್ದು, ಸುಲಭವಾಗಿ ಮ್ಯಾಜಿಕ್ ನಂಬರ್ ಅನ್ನು ದಾಟಬಹುದು ಎಂದು ತಿಳಿಸಿದೆ. ಇದಲ್ಲದೆ, ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 42ರಷ್ಟು ಜನರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗ ಅಧಿಕಾರದಲ್ಲಿರುವ ಬಿಜೆಪಿ 81 ರಿಂದ 93 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ಜೆಡಿಎಸ್ 24 ರಿಂದ 29 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಸ್ವತಂತ್ರ ಮತ್ತು ಪಕ್ಷದ ಅಭ್ಯರ್ಥಿಗಳು ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಹುದ್ದೆಗೆ ನಿಮ್ಮ ನಾಯಕರನ್ನು ಆಯ್ಕೆ ಮಾಡಿ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಜನರಲ್ಲಿ ಶೇ 14ರಷ್ಟು ಮಂದಿ ಬಿಎಸ್ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಶೇ 24ರಷ್ಟು ಮಂದಿ ಬಸವರಾಜ ಬೊಮ್ಮಾಯಿ ಅವರಿಗೆ ಜೈ ಎಂದಿದ್ದರೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಕೇವಲ ಶೇ 3ರಷ್ಟು ಮಂದಿ ಮಾತ್ರ ಬಯಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪರವಾಗಿ ಶೇ 17ರಷ್ಟು ಮಂದಿ ಇದ್ದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಶೇ 42ರಷ್ಟು ಮಂದಿ ಒಲವು ತೋರಿಸಿದ್ದಾರೆ.

ರಾಜ್ಯದಲ್ಲಿ ಯಾವೆಲ್ಲಾ ಪ್ರಮುಖ ವಿಚಾರಗಳು ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂಬುದಕ್ಕೆ, ಶೇ 32ರಷ್ಟು ಮಂದಿ ಬೆಲೆ ಏರಿಕೆ, ಶೇ 22ರಷ್ಟು ಮಂದಿ ನಿರುದ್ಯೋಗ, ಶೇ 16ರಷ್ಟು ಮಂದಿ ಎಂಎಸ್‌ಪಿ ಮತ್ತು ಇತರೆ ರೈತರ ಸಮಸ್ಯೆಗಳು, ಶೇ 14ರಷ್ಟು ಮಂದಿ ಭ್ರಷ್ಟಾಚಾರ, ಶೇ 8ರಷ್ಟು ಮಂದಿ ವೈದ್ಯಕೀಯ ಮತ್ತು ಆರೋಗ್ಯ, ಶೇ 6ರಷ್ಟು ಮಂದಿ ರಸ್ತೆಗಳು ಮತ್ತು ಇತರೆ ಸಮಸ್ಯೆಗಳು ಹಾಗೂ ಶೇ 2ರಷ್ಟು ಜನರು ಇತರ ಸಮಸ್ಯೆಗಳು ಇವೆ ಎಂದಿದ್ದಾರೆ.

ಬಿಜೆಪಿ ಸರ್ಕಾರದ ಆಡಳಿತ ಹೇಗಿದೆ ಎನ್ನುವ ಪ್ರಶ್ನೆಗೆ, ಶೇ 53ರಷ್ಟು ಮಂದಿ ಚೆನ್ನಾಗಿಲ್ಲ ಎಂದಿದ್ದರೆ, ಶೇ 22ರಷ್ಟು ಜನರು ಚೆನ್ನಾಗಿದೆ ಎಂದಿದ್ದಾರೆ. ಶೇ 5ರಷ್ಟು ಮಂದಿ ಏನನ್ನೂ ಹೇಳಲಾಗುವುದಿಲ್ಲ ಎಂದಿದ್ದರೆ, ಶೇ 20ರಷ್ಟು ಮಂದಿ ಪರವಾಗಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com