ಹುಬ್ಬಳ್ಳಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್ ಕ್ರಮವನ್ನು ಅನುಸರಿಸುತ್ತಿದ್ದು ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರಂಭದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಜನರನ್ನು ಮರುಳು ಮಾಡಿದ್ದ ಕಾಂಗ್ರೆಸ್ ಇಂದು ಅದನ್ನು ಜಾರಿಗೆ ತರಲು ಮೀನಾಮೇಷ ನೋಡುತ್ತಿದೆ. ಜನರಿಗೂ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಗೊತ್ತಾಗುತ್ತಿದೆ ಎಂದರು.
ಅಧಿಕಾರಕ್ಕೆ ಬಂದಾಗ ಹಿಂದಿನ ನಮ್ಮ ಬಿಜೆಪಿ ಸರ್ಕಾರದ ಎಲ್ಲಾ ನಿಯಮಗಳನ್ನು ಸ್ವೇಚ್ಛಾಚಾರವಾಗಿ ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು, ಕಾಂಗ್ರೆಸ್ ತುಷ್ಠೀಕರಣ ರಾಜಕಾರಣ ಮಾಡುತ್ತಿದೆ. ಅವರ ಕೈಯಲ್ಲಿ ಅಧಿಕಾರವಿದೆ, ಏನೇನು ಮಾಡುತ್ತಾರೋ ನೋಡೋಣ ಎಂದರು.
ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ತೊಂದರೆಯಾದರೆ ನಾವು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ಮಾಡುವುದು ನಿಶ್ಚಿತ ಎಂದರು.
ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಪ್ರಕರಣ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯಲ್ಲಿದೆ. ಹೀಗಿರುವಾಗ ವಿವೇಕಯುತ ಸರ್ಕಾರ ಅದನ್ನು ಹಿಂತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದರು.
Advertisement
Advertisement