ಠುಸ್ ಆಯ್ತು ಊಹಾ-ಪೋಹ: ರಾಜ್ಯಾಧ್ಯಕ್ಷ-ವಿಪಕ್ಷ ನಾಯಕರ ನೇಮಕಕ್ಕೆ ನಡೆಯದ ಚರ್ಚೆ; ಬಿಜೆಪಿ ನಾಯಕರು ದೆಹಲಿಗೆ ಹೋಗಿದ್ದೇಕೆ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು.
ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು
ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು

ಬೆಂಗಳೂರು: ಹಿಂದುಳಿದ ಕುರುಬ ಸಮುದಾಯದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ ವರದಿಯನ್ನು ತಮ್ಮ ಸರ್ಕಾರ ಶೀಘ್ರದಲ್ಲೇ ಅಂಗೀಕರಿಸಲಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ಹಿಂದುಳಿದ ವರ್ಗಗಳ ಸಮುದಾಯದವರಾದ ಕೆ.ಎಸ್.ಈಶ್ವರಪ್ಪ, ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಪಿಸಿ ಮೋಹನ್ ಅವರೊಂದಿಗೆ ಗುರುವಾರ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸಭೆ ನಡೆಸಿದ್ದಾರೆ.

ಈ ಸಂಬಂಧಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು. ಮುಂಬರುವ ಲೋಕಸಭೆ ಚುನಾವಣೆಗೆ ಜಾತಿ ಗಣತಿ ವರದಿ ಬಿಡುಗಡೆಯ ಪರಿಣಾಮಗಳ ಕುರಿತು ಅವರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿನ ಮುಂದುವರಿದ ಸಮುದಾಯಗಳು ವರದಿಯ ಫಲಿತಾಂಶಗಳನ್ನು ವಿರೋಧಿಸುವ ಸಾಧ್ಯತೆಯಿದೆ ಎಂದು  ರಾಜ್ಯ ನಾಯಕರು ಕೇಂದ್ರ ಬಿಜೆಪಿ ಮುಖಂಡರಿಗೆ ತಿಳಿಸಿದ್ದಾರೆ. ಹಿರಿಯ ನಾಯಕರು ಸೂಕ್ಷ್ಮ ವಿಷಯದ ಬಗ್ಗೆ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂವರು ಹಿರಿಯ ನಾಯಕರು ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಂತೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ನೇಮಕ ಕಾರ್ಯ ನಡೆಯುತ್ತಿದೆ ಎಂಬ ಊಹಾಪೋಹವೂ ಹರಡಿತ್ತು. ಆದರೆ ಬಿಜೆಪಿ ಹೈಕಮಾಂಡ್ ದೇಶದಾದ್ಯಂತದ ಸುಮಾರು 40 ಹಿಂದುಳಿದ ವರ್ಗಗಳ ನಾಯಕರ ಸಭೆಯನ್ನು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ನಡೆಸಿತು, ನಂತರದ ಐದು ರಾಜ್ಯಗಳ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಗೆ ಅವರ ಸಲಹೆಗಳನ್ನು ತೆಗೆದುಕೊಂಡಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಸುಶೀಲ್ ಕುಮಾರ್ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ನಾಯಕರ ಜತೆ ಚರ್ಚೆ ನಡೆಸಿದರು. ಮೂಲಗಳ ಪ್ರಕಾರ ಹಿಂದುಳಿದ ವರ್ಗದ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರು ಪಕ್ಷದೊಂದಿಗೆ ಇರುವುದನ್ನು ಖಚಿತಪಡಿಸಿಕೊಳ್ಳುವ ಕಾರ್ಯತಂತ್ರವನ್ನು ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.

ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಕೇಂದ್ರದ ಕೊಡುಗೆ ಮತ್ತು ಲೋಕಸಭೆ ಚುನಾವಣೆಗೂ ಮುನ್ನ ಅದನ್ನು ಪ್ರಚಾರ ಮಾಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಕರ್ನಾಟಕಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕವು ಶುಕ್ರವಾರ ಅಧ್ಯಯನ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸಲು ಕೈಗೊಂಡ ಕ್ರಮದ ಬಗ್ಗೆ ವರಿಷ್ಠರು ಕೇಳಿದರು, ಖಾತರಿ ಯೋಜನೆ ನೀಡುವ  ಮೂಲಕ ರಾಜ್ಯವನ್ನು ದಿವಾಳಿ ಮಾಡುವುದನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡಿಲ್ಲ ಎಂದು ನಾವು  ತಿಳಿಸಿದ್ದೇವೆ. ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ನೇಮಕದ ವಿಷಯ ಚರ್ಚೆಯಾಗಿಲ್ಲ ಎಂದು ಈಶ್ವರಪ್ಪ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com