ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ನಲ್ಲಿ ಭುಗಿಲೆದ್ದಿರುವ ಅಸಮಧಾನ, ಅತೃಪ್ತಿ ಶಮನವಾಗುತ್ತಿಲ್ಲ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮುನಿಸಿಕೊಂಡಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕುಮಾರಸ್ವಾಮಿಯವರ ಆಪ್ತ ಮಾಜಿ ಶಾಸಕ ಎಂ.ಸಿ.ಅಶ್ವಥ್ ಸೇರಿದಂತೆ ಚನ್ನಪಟ್ಟಣ ಹಾಗೂ ರಾಮನಗರ ಜಿಲ್ಲೆಯ ಅನೇಕ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದರು.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ- ಜೆಡಿಎಸ್ ಮೈತ್ರಿ ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಮಿಸ್ಟರ್ ಡಿ.ಕೆ. ಶಿವಕುಮಾರ್ ನಿಮ್ಮ ಆಟ ನಡೆಯುವುದಿಲ್ಲ ಎಂಬ ಹೆಚ್ ಡಿ ದೇವೇಗೌಡರ ಎಚ್ಚರಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು? ಎಂದು ಪ್ರಶ್ನಿಸಿದರು.
ಈ ಹಿಂದೆ ನೀವು, ಬಿಜೆಪಿಯವರು ಏನು ಮಾಡಿದ್ದೀರಿ ಎಂಬುದು ಇತಿಹಾಸದ ಪುಟದಲ್ಲಿದೆ. ಈ ಡಿ.ಕೆ. ಶಿವಕುಮಾರ್ ಗೆ ಹೆದರಿಸಿದರೆ ನಾನು ಹೆದರುವುದಿಲ್ಲ ಎಂದು ನಿಮಗೆ ಚನ್ನಾಗಿ ಗೊತ್ತಿದೆ. ದೊಡ್ಡ ಇತಿಹಾಸ ಇರುವ ಪಕ್ಷದ ಅಧ್ಯಕ್ಷನಾಗಿ ಪಕ್ಷದ ತತ್ವ ಸಿದ್ಧಾಂತ ನಂಬಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಜವಾಬ್ದಾರಿ, ಬದ್ಧತೆ ನನಗಿದೆ ಎಂದರು.
Advertisement