ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ; ನೀವು ಚೆಸ್ ಫುಟ್ಬಾಲ್ ಆಡಿಲ್ಲವೇ: ಡಿ.ಕೆ ಶಿವಕುಮಾರ್

ಈ ಹಿಂದೆ ನೀವು ಕೂಡ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸಿಕೊಂಡು ಯಾರ ಜತೆಗಾದರೂ ಸಂಬಂಧ ಬೆಳೆಸುತ್ತಾರೆ. ಹಾಗಿದ್ದರೆ, ಸಿದ್ಧಾಂತ ನಂಬಿರುವ ಕಾರ್ಯಕರ್ತರ ಕತೆ ಏನು?
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಈ ಹಿಂದೆ ನೀವು ಕೂಡ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸಿಕೊಂಡು ಯಾರ ಜತೆಗಾದರೂ ಸಂಬಂಧ ಬೆಳೆಸುತ್ತಾರೆ. ಹಾಗಿದ್ದರೆ, ಸಿದ್ಧಾಂತ ನಂಬಿರುವ ಕಾರ್ಯಕರ್ತರ ಕತೆ ಏನು? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಡಿ.ಕೆ. ಶಿವಕುಮಾರ್‌, ಜೆಡಿಎಸ್‌ ಅನ್ನು ದುರ್ಬಲಗೊಳಿಸುತ್ತೇನೆ ಎಂಬುದು ನಿಮ್ಮ ಭ್ರಮೆ. ನಿಮ್ಮ ಆಟ ನಡೆಯಲ್ಲ ಎಂದು ಎಚ್‌.ಡಿ. ದೇವೇಗೌಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಹಳ ಗೌರವದಿಂದ ನಿಮ್ಮ ಮಾತನ್ನು ನಾನು ಸ್ವೀಕರಿಸುತ್ತೇನೆ. ಆದರೆ, ಈ ಹಿಂದೆ ನೀವೂ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಈಚೆಗೆ ನಮ್ಮ ಪಕ್ಷದಿಂದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಆ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಕರೆದುಕೊಂಡು ಹೋಗಿ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿಲ್ಲವೇ? ಅಷ್ಟಕ್ಕೂ ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು’ ಎಂದು ಕೇಳಿದರು.

ಹೆದರಿಸಿದರೆ ನಾನು ಹೆದರುವುದಿಲ್ಲ ಎಂದು ನಿಮಗೆ ಚೆನ್ನಾಗಿ ಗೊತ್ತಿದೆ. ನಾನು ಸಾತನೂರು, ಕನಕಪುರದಲ್ಲಿ 1985ರಿಂದ ಇಲ್ಲಿಯವರೆಗೂ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನನ್ನ ಜತೆ ನನ್ನ ಸಹೋದರ ಸುರೇಶ್‌, ತೇಜಸ್ವಿನಿ ಅವರೂ ರಾಜಕಾರಣ ಮಾಡಿದ್ದಾರೆ. ಹಿಂದೆ ನಾವು ನಿಮ್ಮ ಜತೆಯೂ ಕೈ ಜೋಡಿಸಿದ್ದೇವೆ, ನಿಮಗೂ ಶಕ್ತಿ ತುಂಬಿದ್ದೇವೆ. ಯಾವ ಸಂದರ್ಭದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬ ಅರಿವು ನಮಗಿದೆ. ಹಳೆಯದನ್ನು ಕೆದಕಿ ಉತ್ತರ ಕೊಡುವ ಅಗತ್ಯವಿಲ್ಲ. ನೀವು ಎಷ್ಟು ವಾರ್ನಿಂಗ್‌ ಕೊಟ್ಟರೂ ನಿಮ್ಮ ಸುಪುತ್ರರ ಕ್ಷೇತ್ರದಲ್ಲಿ ನಿಮ್ಮನ್ನು ಸಾಕಿ ಬೆಳೆಸಿದ ಜನ ಇಂದು ಕಾಂಗ್ರೆಸ್‌ ಸೇರಲು ಬಂದಿದ್ದಾರೆ. ಇಲ್ಲಿ ಬಂದಿರುವ ಎಲ್ಲರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಬಿಜೆಪಿ ಮೈತ್ರಿಯಿಂದ 5 ವರ್ಷಗಳಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸದಿದ್ದರೆ, ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಪಕ್ಷದ ದಂಡನಾಯಕನಾಗಿ ಎಷ್ಟು ಬಾರಿ ನಿವೃತ್ತಿ ಘೋಷಿಸುತ್ತೀರಿ? ರಾಜಕಾರಣ ಏನೇ ಇರಲಿ, ಬಿಜೆಪಿ ಜತೆ ಮೈತ್ರಿ ಮೂಲಕ ನೀವು ಕಳುಹಿಸಿರುವ ಸಂದೇಶವನ್ನು ಮುಗ್ಧ ಜನ ಹೇಗೆ ಸ್ವೀಕರಿಸಬೇಕು?

ಇಂತಹ ಪರಿಸ್ಥಿತಿಯಲ್ಲಿ ಸಿದ್ಧಾಂತ ನಂಬಿ ನಮ್ಮ ಪಕ್ಷಕ್ಕೆ ಬಂದವರನ್ನು ಪಕ್ಷದ ಅಧ್ಯಕ್ಷನಾಗಿ ನಾನು ಕರೆದುಕೊಳ್ಳಬಾರದೆ? ಅನೇಕರು ಈಗ ಕಾಂಗ್ರೆಸ್‌ ಕಡೆ ನೋಡುತ್ತಿದ್ದಾರೆ. ರಾಜ್ಯದ ಪ್ರತಿ ಮನೆ-ಮನೆಗೂ ಹಾಗೂ ಕಾರ್ಯಕರ್ತರ ಬಳಿ ಹೋಗಿ ಕೈ ಮುಗಿದು ದೇಶ ಉಳಿಸೋಣ ಬನ್ನಿ ಎಂದು ಪಕ್ಷಕ್ಕೆ ಸೇರಿಸಿಕೊಳ್ಳುವ ಅಧಿಕಾರವನ್ನು ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ನಮಗೆ ಕೊಟ್ಟಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com