"ಅವರು ಪಾಕಿಸ್ತಾನಕ್ಕೆ ಬೆಂಬಲ ನೀಡಲು ಹೋಗಿದ್ದರಾ...?": ಸಿಎಂ, ಡಿಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ 

ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಿಸಲು ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ವೀಕ್ಷಿಸಲು ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ, "ಅವರು ಪಾಕಿಸ್ತಾನಕ್ಕೆ ಬೆಂಬಲ ನೀಡಲು ಹೋಗಿದ್ದರಾ...?" ಎಂದು ಶನಿವಾರ ಪ್ರಶ್ನಿಸಿದ್ದಾರೆ. 

"ನಿನ್ನೆ ಸಿಎಂ, ಡಿಸಿಎಂ ಹಾಗೂ ಕೆಲವು ಸಚಿವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಹೋಗಿದ್ದರು. ಭಾರತ-ಪಾಕಿಸ್ತಾನ ಪಂದ್ಯವಾದರೆ ಪರವಾಗಿಲ್ಲ. ಆದರೆ ಪಂದ್ಯ ನಡೆದಿದ್ದು ಪಾಕಿಸ್ತಾನ-ಆಸ್ಟ್ರೇಲಿಯಾ ನಡುವೆ. ಅವರು ಪಾಕಿಸ್ತಾನಕ್ಕೆ ಅಥವಾ ಆಸ್ಟ್ರೇಲಿಯಾಕ್ಕೆ ಬೆಂಬಲ ನೀಡಲು ಹೋಗಿದ್ದರಾ? ರಾಜ್ಯ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದೆ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಕ್ರಿಕೆಟ್ ನೋಡುವುದು ತಪ್ಪಲ್ಲ. ಆದರೆ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಮತ್ತೊಂದು ಕಡೆ ವಿದ್ಯುತ್ ಸಮಸ್ಯೆ ಇದೆ. ಕೆಲ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏಳೆಂಟು ಗಂಟೆಗಳ ಕಾಲ ಮ್ಯಾಚ್ ನೋಡುವುದು ಸರಿಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ನಿನ್ನೆ ಆಸ್ಟ್ರೇಲಿಯಾ - ಪಾಕಿಸ್ತಾನ ಮ್ಯಾಚ್ ವೀಕ್ಷಣೆ ಮಾಡಿದ್ದರು. ಸಿಎಂ ಜೊತೆಗೆ ವಿಐಪಿ ವಿಂಗ್‌ನಲ್ಲಿ ಕುಳಿತು ಸಚಿವ ಬೈರತಿ ಸುರೇಶ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹಮದ್ ಕ್ರಿಕೆಟ್ ವೀಕ್ಷಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com