ಪಂಚ ರಾಜ್ಯ ಚುನಾವಣೆ: AICC ಸ್ಥಳೀಯ ಘಟಕಗಳಿಗೆ ಮೈತ್ರಿಕೂಟದ ಮಿತ್ರ ಪಕ್ಷಗಳ ಆಯ್ಕೆ ಮಾಡುವ ಅವಕಾಶ- ಖರ್ಗೆ

ಪಂಚ ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದೊಂದಿಗೆ ಎಷ್ಟು ಸ್ಥಾನಗಳನ್ನು ಹಂಚಿಕೊಳ್ಳಬೇಕು ಎಂಬುದರ ಕುರಿತು ಆ ಪಕ್ಷಗಳೊಂದಿಗೆ ಚರ್ಚಿಸಲು ಎಪಿಸಿಸಿಯ ಸ್ಥಳೀಯ ಘಟಕಗಳಿಗೆ ಅವಕಾಶ ನೀಡಲಾಗಿದೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಪಂಚ ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದೊಂದಿಗೆ ಎಷ್ಟು ಸ್ಥಾನಗಳನ್ನು ಹಂಚಿಕೊಳ್ಳಬೇಕು ಎಂಬುದರ ಕುರಿತು ಆ ಪಕ್ಷಗಳೊಂದಿಗೆ ಚರ್ಚಿಸಲು ಎಪಿಸಿಸಿಯ ಸ್ಥಳೀಯ ಘಟಕಗಳಿಗೆ ಅವಕಾಶ ನೀಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸಮಾಜವಾದಿ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬುದನ್ನು ಅಲ್ಲಗಳೆದರು. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಎಷ್ಟು ಸ್ಥಾನಗಳಲ್ಲಿ ಗೆದ್ದಿದೆ ಮತ್ತು ಯಾವ ಆಧಾರದ ಮೇಲೆ ಹೆಚ್ಚಿನ ಸ್ಥಾನಗಳನ್ನು ಕೇಳುತ್ತಿದೆ ಎಂಬುದನ್ನು ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಲಿ ಎಂದು ಎಐಸಿಸಿ ಅಧ್ಯಕ್ಷರು ಪ್ರಶ್ನಿಸಿದರು.

ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಬಿಜೆಪಿ ನೀಡಿದ ಸುಳ್ಳು ಭರವಸೆಗಳಿಂದ ಜನ ಬೇಸತ್ತಿದ್ದಾರೆ. ಹಿಂದಿನ ಚುನಾವಣೆಯಲ್ಲಿ ನೀಡಿದ ಯಾವ ಭರವಸೆಯನ್ನೂ ಬಿಜೆಪಿ ಈಡೇರಿಸಿಲ್ಲ ಎಂದು ಆರೋಪಿಸಿದರು. ಎಲ್ಲ 5 ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲಿದೆ ಎಂದು ಎಐಸಿಸಿ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

5 ರಾಜ್ಯಗಳ ವಿಧಾನಸಭಾ ಚುನಾವಣೆಯು ಆಡಳಿತ ಪಕ್ಷದ ಬಗ್ಗೆ ಮತದಾರರ ಮನಸ್ಥಿತಿಯನ್ನು ಸೂಚಿಸುತ್ತದೆಯೇ ಎಂಬ ಪ್ರಶ್ನೆಗೆ, ಆಯಾ ರಾಜ್ಯಗಳ ಸಮಸ್ಯೆಗಳು ವಿಭಿನ್ನವಾಗಿವೆ. ವಿಧಾನಸಭೆ ಚುನಾವಣೆಯ ವಿಷಯಗಳು ವಿಭಿನ್ನವಾಗಿವೆ. ಲೋಕಸಭೆ ಚುನಾವಣೆ ಬೇರೆ ಎಂದು ಖರ್ಗೆ ಹೇಳಿದರು.

ಸಚಿವಾಲಯಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಖರ್ಗೆ, ಬಿಜೆಪಿ ತನ್ನ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಚುನಾವಣಾ ಉದ್ದೇಶಕ್ಕೆ ಬಳಸಿಕೊಳ್ಳಲಿ, ಆದರೆ ಅಧಿಕಾರಿಗಳನ್ನು ಬಳಸುವುದು ಸಂಪೂರ್ಣವಾಗಿ ತಪ್ಪು. ಸಾರ್ವಜನಿಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಕುರಿತು ಎಐಸಿಸಿ ಅಧ್ಯಕ್ಷರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಕೆಲವೇ ತಿಂಗಳುಗಳ ಹಿಂದೆ ಅಧಿಕಾರಕ್ಕೆ ಬಂದಿದೆ. 5 ರಾಜ್ಯಗಳ ಚುನಾವಣೆಗೆ ಹಣ ನೀಡಲು ಎಟಿಎಂ ಆಗುವುದು ಹೇಗೆ, ಆದಾಯ ಎಲ್ಲಿದೆ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರವು ತನ್ನ ಎಲ್ಲಾ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಇತ್ಯಾದಿಗಳನ್ನು ಬಳಸಿಕೊಂಡು ಕಾಂಗ್ರೆಸ್ಸೇತರ ನಾಯಕರಿಗೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮಂತ್ರಿಗಳ ಮೇಲೆ ಬಿಜೆಪಿಯವರು ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಮಾನಹಾನಿಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದರು. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com