ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ, ಕೇಂದ್ರ ಸರ್ಕಾರದ ಸಹಯೋಗದ ವಿವಿಧ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಉದ್ಯಮಿಗಳ ಲಕ್ಷಾಂತರ ಕೋಟಿ ಸಾಲಮನ್ನಾ ಮಾಡುವ ನಿಮ್ಮ ಸರ್ಕಾರಕ್ಕೆ ಕನ್ನಡಿಗರ ಕಲ್ಯಾಣ ಕಾರ್ಯಕ್ರಮಗಳು ಹೊರೆಯಾದವೇ? ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದ ಯೋಜನೆಗಳು ಬಂದ್ ಆಗಲಿದೆ ಎಂದು ಜೆ.ಪಿ ನಡ್ಡಾ ಹೇಳಿದ್ದರು, ಅವರು ಆಡಿದ್ದನ್ನು ನೀವು ಮಾಡಿ ತೋರಿಸುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಕೇಂದ್ರ ಪ್ರಾಯೋಜಕತ್ವದ ಹಲವು ಜನಪರ ಯೋಜನೆಗಳ ಅನುದಾನಕ್ಕೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಕೊಕ್ಕೆ ಹಾಕಿದ್ದರಿಂದ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪದೆ ಸಂಕಷ್ಟದಲ್ಲಿದ್ದಾರೆ. ಕನ್ನಡಿಗರ ಪಾಲಿನ ಅನುದಾನ ಕತ್ತರಿಸಿ ಅದಾನಿಯ ಕೈಗಿತ್ತರೆ ದೇಶ ಅಭಿವೃದ್ಧಿ ಆಗುವುದೇ? ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.
Advertisement