ಬಿಜೆಪಿ ಟಿಕೆಟ್ ಬಂಡಾಯ: ಲಕ್ಷ್ಮಣ್ ಸವದಿ ಬೆನ್ನಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಲು ಮತ್ತೋರ್ವ ನಾಯಕ ಮುಂದು
ಬೆಳಗಾವಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಮತ್ತೋರ್ವ ನಾಯಕ ಕೂಡ ಸೇರ್ಪಡೆಯಾಗಿದ್ದಾರೆ.
ಹೌದು.. ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆಯುತ್ತಿರುವವರ ಪಟ್ಟಿ ಬೆಳೆಯುತ್ತಾ ಸಾಗಿದೆ. ಬೆಳಗ್ಗೆಯಷ್ಟೇ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಲಕ್ಷ್ಮಣ್ ಸವದಿ ಪಕ್ಷ ತೊರೆಯುವ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೋರ್ವ ನಾಯಕ ಕೂಡ ಪಕ್ಷಕ್ಕೆ ಗುಡ್ ಬೈ ಹೇಳಲು ಸಿದ್ಧತೆ ನಡೆಸಿದ್ದಾರೆ.
ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ಘೋಷಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ಇನ್ನೋರ್ವ ಬಿಜೆಪಿ ನಾಯಕ ರಾಜೀನಾಮೆಗೆ ಮುಂದಾಗಿದ್ದಾರೆ. ಬೈಲಹೊಂಗಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಡಾ. ವಿಶ್ವನಾಥ್, ಬಿಜೆಪಿಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಬೈಲಹೊಂಗಲದಲ್ಲಿ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಜಗದೀಶ್ ಮೆಟಗುಡ್ಡಗೆ ಮಣೆ ಹಾಕಲಾಗಿದೆ. ಇದರಿಂದ ಬೆಂಬಲಿಗರೊಂದಿಗೆ ಬಿಜೆಪಿ ತೊರೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ