ಬಿಜೆಪಿಯಲ್ಲಿ 'ಬಂಡಾಯ'ದ ಬಿರುಗಾಳಿ: ಟಿಕೆಟ್ ವಂಚಿತರ ರೋಷಾವೇಶ; ಬೆಂಬಲಿಗರ ಆಕ್ರೋಶ

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಕೆಲವರು ತಮ್ಮ ನಾಯಕರಿಗೆ ಮಾಡಿದ ಅನ್ಯಾಯಕ್ಕಾಗಿ ಕಣ್ಣೀರು ಹಾಕಿದರು.
ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ
ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ  ನಂತರ, ಟಿಕೆಟ್ ವಂಚಿತರಿಂದ ಪಕ್ಷವು ಬಂಡಾಯ ಎದುರಿಸುತ್ತಿದೆ.

ಕೆಲವು ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ, ಹಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಕೆಲವರು ತಮ್ಮ ನಾಯಕರಿಗೆ ಮಾಡಿದ ಅನ್ಯಾಯಕ್ಕಾಗಿ ಕಣ್ಣೀರು ಹಾಕಿದರು.

ನಾಯಕರ ಬಂಡಾಯವು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಸ್ವಾಗತಿಸಲಾಗಿದೆ, ಅತೃಪ್ತ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ತೊರೆಯುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎಂಎಲ್‌ಸಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಕುರಿತು ಅವರು ಗುರುವಾರ ಘೋಷಣೆ ಮಾಡುವ ನಿರೀಕ್ಷೆ ಇದೆ. ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್ ಶಂಕರ್ ಅವರು ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.  2019 ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ತೊರೆದು ಆರ್. ಶಂಕರ್ ಬಿಜೆಪಿ ಸೇರಿದರು.  ನಂತರ ಅವರನ್ನು ಬಿಜೆಪಿಯಿಂದ ಎಂಎಲ್ಸಿ ಮಾಡಲಾಯಿತು.

ಬೆಳಗಾವಿ ಜಿಲ್ಲೆಯಲ್ಲಿ ಬೈಲಹೊಂಗಲ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಿ ಪ್ರಕಟಿಸಿದ ಬಳಿಕ ಪಕ್ಷ ತನಗೆ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ.  ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿರುವ ಪಾಟೀಲ್ ಅವರು 2013 ರಲ್ಲಿ ಕೆಜೆಪಿ ಟಿಕೆಟ್‌ನಲ್ಲಿ ಗೆದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅನುಯಾಯಿಗಳು ಪಕ್ಷ ತೊರೆಯುವ ಬೆದರಿಕೆಯನ್ನೂ ಹಾಕಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಸೊಗಡು ಶಿವಣ್ಣ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ನಿಷ್ಠಾವಂತರಿಗೆ ಟಿಕೆಟ್ ನೀಡದೆ ಹೊಸಬರಿಗೆ ಟಿಕೆಟ್ ನೀಡಲಾಗಿದೆ.

ಕಟ್ಟೆ ಸತ್ಯ ಸ್ವತಂತ್ರವಾಗಿ ಹೋರಾಟ

ಬೆಂಗಳೂರಿನಲ್ಲಿ ಬಸವನಗುಡಿಯಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಗದ ಕಾರಣ ಮಾಜಿ ಮೇಯರ್ ಮತ್ತು ಬಿಜೆಪಿ ಮುಖಂಡ ಕಟ್ಟೆ ಸತ್ಯ  ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಚಿಕ್ಕಪೇಟೆಯಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎನ್‌ಆರ್ ರಮೇಶ್ ಅವರ ಅನುಯಾಯಿಗಳು ಪ್ರತಿಭಟನೆ ನಡೆಸಿದರು.

ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಿಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿದ ನಂತರ, ಗೋವಿಂದರಾಜನಗರದಿಂದ ಅವರನ್ನು ಮತ್ತೆ ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿ ಬೆಂಬಲಿಗರು ಬೆಂಗಳೂರಿನ  ಸೋಮಣ್ಣ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿಗೆ  ಟಿಕೆಟ್ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಿಕೆಟ್ ಸಿಕ್ಕ ಹಲವು ಮುಖಂಡರು ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಬೊಮ್ಮಾಯಿ, ಅಶೋಕ ಸೇರಿದಂತೆ ಕೆಲವು ಮುಖಂಡರು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಕೆಲವರು ಪಕ್ಷದ ಕಚೇರಿಯಿಂದ ಬಿ ಫಾರಂ ಸಂಗ್ರಹಿಸಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿಗಳಿಗೂ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ಹಿರಿಯ ನಾಯಕರಿಗೆ ಮಾಡಿದ ಘನ ಘೋರ ಅನ್ಯಾಯ. 40 ಪರ್ಸೆಂಟ್ ಸರ್ಕಾರ ದುರಸ್ತಿ ಮಾಡಲು ಆಗದಂತೆ ಮೀರಿ ಮುಳುಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com