ಮಾಜಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಜೆಡಿಎಸ್ ಸೇರ್ಪಡೆ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸುಗೊಂಡಿದೆ. ಟಿಕೆಟ್ ವಂಚಿತ ಅಭ್ಯರ್ಥಿಗಳು ತಮ್ಮ ಮೂಲ ಪಕ್ಷವನ್ನು ತೊರೆದು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ದೊರೆಯದೆ ಕಾಂಗ್ರೆಸ್ ವಿರುದ್ಧ ಸೆಟೆದು ನಿಂತಿರುವ ಮಾಜಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಇಂದು ಜೆಡಿಎಸ್ ಸೇರ್ಪಡೆಯಾದರು.
ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ರಘು ಆಚಾರ್, ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ಜೆಡಿಎಸ್ ಸೇರಿದರು.
ನಂತರ ಮಾತನಾಡಿದ ರಘು ಆಚಾರ್, ರಾಜಕಾರಣದಲ್ಲಿ ಸಾಮಾಜಿಕ ನ್ಯಾಯಕ್ಕೆ ಮನ್ನಣೆ ಮುಖ್ಯ, ಕಾಂಗ್ರೆಸ್ ಪಕ್ಷದಲ್ಲಿ ಅದಕ್ಕೆ ಅವಕಾಶ ಇಲ್ಲದಿದ್ದ ಕಾರಣ ಜೆಡಿಎಸ್ ಸೇರಿರುವುದಾಗಿ ತಿಳಿಸಿದರು.
ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿಯೇ ತಿರುತ್ತೇವೆ. ನಿಮ್ಮೆಲ್ಲರ ಸಹಕಾರ ಮುಖ್ಯ. ಅಧಿಕಾರಕ್ಕಾಗಿ ಪಕ್ಷ ಸೇರಿಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಆಣತಿಯಂತೆ ಕೆಲಸ ಮಾಡುವೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ