ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಆ ಹುದ್ದೆ ನನಗೆ ಬೇಡ: ಮಲ್ಲಿಕಾರ್ಜುನ ಖರ್ಗೆ
ಕೋಲಾರ: ಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ನ ‘ಜೈ ಭಾರತ’ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಸಿಎಂ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ ಎಂದರು.
ರಾಜ್ಯ ಕಾಂಗ್ರೆಸ್ನ ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಚುನಾವಣೆಯಲ್ಲಿ 130 ರಿಂದ 140 ಸೀಟು ಗೆಲ್ಲಬೇಕು ಎಂದು ಕೋಲಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಸಂದೇಶ ನೀಡಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ, ಡಬಲ್ ಇಂಜಿನ್ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್ ಕಲರ್ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂದರು.
ಮೋದಿ ಸರ್ಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ. ಅದಕ್ಕಿಂತ ಹೆಚ್ಚಾಗಿ 40 ಪರ್ಸೆಂಟ್ ಬಿಜೆಪಿ ಸರ್ಕಾರದ ಮೇಲೆ ಬೇಸತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇಲ್ಲಿಗೆ ಏನು ಕೊಟ್ಟಿದೆ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ