ಕರ್ನಾಟಕ ಚುನಾವಣೆ: ಉತ್ತರ ಕರ್ನಾಟಕ ಹಿಡಿತ ಉಳಿಸಿಕೊಳ್ಳಲು ಬಿಜೆಪಿಗೆ ಕಠಿಣ ಪರಿಸ್ಥಿತಿ!

2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. 
ಬಿಎಸ್ ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್
ಬಿಎಸ್ ಯಡಿಯೂರಪ್ಪ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್

ಬೆಂಗಳೂರು: 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. 

ಈ ಭಾಗದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರ ನಿರ್ಗಮನದ ಆಡಳಿತ ಪಕ್ಷಕ್ಕೆ ಕಠಿಣ ಸವಾಲ್ ಆಗಿದೆ. 

ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳನ್ನು ಒಳಗೊಂಡಿರುವ ಉತ್ತರ ಕರ್ನಾಟಕ 90 ವಿಧಾನಸಭಾ ಸ್ಥಾನಗಳೊಂದಿಗೆ 13 ಜಿಲ್ಲೆಗಳನ್ನು ಹೊಂದಿದೆ. ಪ್ರಸ್ತುತ ಬಿಜೆಪಿ 52, ಕಾಂಗ್ರೆಸ್ 32 ಮತ್ತು ಜೆಡಿಎಸ್ 6 ಸ್ಥಾನಗಳನ್ನು ಹೊಂದಿದೆ.
ಈ ಪ್ರದೇಶವು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಗದಗ, ಧಾರವಾಡ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡಿದೆ. ಬಹುತೇಕ ಕಡೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಜೆಡಿಎಸ್ ಎರಡಂಕಿ ಸ್ಥಾನ ಗಳಿಸುವ ಭರವಸೆಯಲ್ಲಿದೆ.

ಗಣಿ ಉದ್ಯಮಿ-ರಾಜಕಾರಣಿ ಜನಾರ್ದನರೆಡ್ಡಿ ಆರಂಭಿಸಿರುವ ಕಲ್ಯಾಣ ಕರ್ನಾಟಕ ರಾಜ್ಯ ಪಕ್ಷ (ಕೆಕೆಆರ್‌ಪಿ)ಯಿಂದ ಬಿಜೆಪಿ ಸವಾಲನ್ನು ಎದುರಿಸುತ್ತಿದೆ. ರೆಡ್ಡಿ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದು, ಪಕ್ಷದಿಂದ ಹೊರನಡೆದಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಎಂದು ಕರೆಯಲ್ಪಡುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಅವರ ಪಕ್ಷವು ಬಿಜೆಪಿ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಹೋರಾಟ ತೀವ್ರಗೊಳ್ಳಲಿದೆ.

ಎರಡನೆಯದಾಗಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿಯನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಉತ್ತರ ಕರ್ನಾಟಕ ಭಾಗದ ಹಿಂದೂ ಕಾರ್ಯಕರ್ತರಲ್ಲಿ ಅವರು ಸಾಕಷ್ಟು ಪ್ರಭಾವ ಹೊಂದಿರುವುದರಿಂದ ಈ ಬೆಳವಣಿಗೆ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಬಿಜೆಪಿಗೆ ಹೋಲಿಸಿದರೆ ಕಳೆದ ಚುನಾವಣೆಯಲ್ಲಿ 32 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ಭರವಸೆಯಲ್ಲಿದೆ.  

ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತು ಪ್ರಭಾವಿ ಲಿಂಗಾಯತ ನಾಯಕರಾದ ಶೆಟ್ಟರ್ ಮತ್ತು ಸವದಿ ಅವರ ನಿರ್ಗಮನ ಬಿಜೆಪಿಯ ಮತಬ್ಯಾಂಕ್ ಒಡೆಯುತ್ತದೆ. ಈ ಪ್ರದೇಶದಿಂದ ಪ್ರಮುಖ ಸ್ಥಾನ  ಗೆಲ್ಲುವ ಸುಳಿವು ಇರುವುದರಿಂದ ರಾಹುಲ್ ಗಾಂಧಿ  ಚುನಾವಣೆಯಲ್ಲಿ ಪಕ್ಷ 150 ಸ್ಥಾನಗಳನ್ನು ದಾಟಲಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತವೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿಸುವುದರಿಂದ ಈ ಭಾಗದ ತುಳಿತಕ್ಕೊಳಗಾದ ವರ್ಗಗಳ ಮತಗಳು ಗಣನೀಯ ಪ್ರಮಾಣದಲ್ಲಿ ಸಿಗಲು ಸಹಕಾರಿಯಾಗಲಿದೆ. 18 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಿಂದ ಗರಿಷ್ಠ ಸ್ಥಾನಗಳನ್ನು ಗೆಲ್ಲುವತ್ತ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಗಮನಹರಿಸಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 13 ಮತ್ತು ಕಾಂಗ್ರೆಸ್ ಐದು ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಕನಿಷ್ಠ 12 ಸ್ಥಾನ ಗೆಲ್ಲಲಿದೆ ಎನ್ನುತ್ತಾರೆ ಸ್ಥಳೀಯರು.

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡದಿರುವುದರಿಂದ ಲಿಂಗಾಯತ ಸಮುದಾಯ ಅಸಮಾಧಾನಗೊಂಡಿದೆ. ಈ ಬೆಳವಣಿಗೆಯಿಂದ ಶೇ.20ರಷ್ಟು ಲಿಂಗಾಯತ ಮತಗಳು ಪಲ್ಲಟಗೊಳ್ಳಲಿವೆ ಎಂದು ರಾಜಕೀಯ ವಿಶ್ಲೇಷಕ ಬಸವರಾಜ ಸೂಳಿಭಾವಿ ಐಎಎನ್ ಎಸ್ ಸುದ್ದಿಸಂಸ್ಥೆಗೆ ತಿಳಿಸಿದರು.  ಇಲ್ಲಿಯವರೆಗೂ ಲಿಂಗಾಯತ ಸಮುದಾಯ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿತ್ತು. ಕಳೆದ ಚುನಾವಣೆಯಲ್ಲಿ ಶೇ 90ರಷ್ಟು ಲಿಂಗಾಯತ ಮತಗಳು ಬಿಜೆಪಿ ಪಾಲಾಗಿದ್ದವು. ಈ ಬಾರಿ ಅದು ಆಗುವುದಿಲ್ಲ ಮತ್ತು ಕನಿಷ್ಠ 30 ರಷ್ಟು ಮತಗಳ ವಿಭಜನೆಯಾಗಲಿದೆ ಎಂದು ಅವರು ಹೇಳಿದರು. 

ಈ ಭಾಗದ ಗ್ರಾಮೀಣ ಭಾಗಗಳಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸಬೇಕಾಗುತ್ತದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಐಎಎನ್‌ಎಸ್‌ಗೆ ತಿಳಿಸಿದರು. ಶೆಟ್ಟರ್ ಮತ್ತು ಸವದಿ ಸೇರ್ಪಡೆಯಿಂದ ಕಿತ್ತೂರು ಕರ್ನಾಟಕ ಭಾಗದ 56 ವಿಧಾನಸಭಾ ಸ್ಥಾನಗಳ ಪೈಕಿ 40ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಇನ್ನೊಂದು ಮಹತ್ವದ ಅಂಶವೆಂದರೆ 1985ರ ನಂತರ ಕರ್ನಾಟಕದಲ್ಲಿ ಯಾವ ಪಕ್ಷವೂ ಸತತವಾಗಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ ಎಂದು ಅಶೋಕ್ ಚಂದರಗಿ ಹೇಳಿದ್ದಾರೆ. 

ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ,  ಎಲ್ಲಾ ರಾಜಕೀಯ ಪಕ್ಷಗಳಿಗೆ ಪರಿಸ್ಥಿತಿ ಕಠಿಣವಾಗುತ್ತಿದೆ. ಈ ಪ್ರದೇಶವನ್ನು ಕಾಂಗ್ರೆಸ್ ವಶಪಡಿಸಿಕೊಳ್ಳುತ್ತದೆಯೇ ಅಥವಾ ಮತದಾರರು ಕೇಸರಿ ಪಕ್ಷದತ್ತ ಒಲವು ತೋರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಜೆಡಿಎಸ್ ಕೂಡಾ ತನ್ನದೇ ಆದ ಛಾಪು ಮೂಡಿಸುವ ನಿರೀಕ್ಷೆಯಲ್ಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಎಎಪಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ಸಿಗುತ್ತಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com