ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ನಾಳೆ ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ.
ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಈ ಸಭೆ ನಡೆಯಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪದಾಧಿಕಾರಿಗಳು, ಸಚಿವರು ಮತ್ತು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಎಲ್ಲ ನಾಯಕರಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಹಿರಿಯ ನಾಯಕರು ಸಲಹೆ, ಸೂಚನೆ ನೀಡಲಿದ್ದಾರೆ. ಮತಗಟ್ಟೆ ಮಟ್ಟದಲ್ಲಿ ಮತದಾರರನ್ನು ತಲುಪಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಪಕ್ಷದ ಪರ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಕಳೆದ ಬಾರಿಯ ಹೀನಾಯ ಸೋಲು ಪುನರಾವರ್ತನೆ ಆಗದಂತೆ ಈಗಿನಿಂದಲೇ ತಯಾರಿ ನಡೆಸಲು ಕೈ ನಾಯಕರು ನಿರ್ಧರಿಸಿದ್ದಾರೆ.
Advertisement