ಮೈಸೂರು: 10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿರುವ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರದ ಬಗ್ಗೆ ಸಭೆ ನಡೆಸಿದ್ದೇವೆ. ಜೂನ್ ಮತ್ತು ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಶೇ 60 ರಷ್ಟು ಬರ ಇದ್ದರೆ ಕೇಂದ್ರ ಅನುದಾದ ಬಿಡುಗಡೆ ಮಾಡುತ್ತದೆ. ಇದನ್ನು ಶೇ.30ಕ್ಕೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. ಇದರಿಂದ ವಿಶೇಷ ಅನುದಾನವನ್ನ ಕೇಂದ್ರದಿಂದ ಕೇಳಿಲ್ಲ. ಶೇ.30 ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ಕಮಿಟಿ ಮೀಟಿಂಗ್ ನಲ್ಲಿ ಬರ ನೀರಿನ ಪರಿಸ್ಥಿತಿಯ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇವೆ ಎಂದು ಮಾಹಿತಿ ನೀಡಿದರು.
ಗುತ್ತಿಗೆದಾರರಿಂದ ಹಣ ವಸೂಲಿ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿ, ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ, ಕೆಲಸ ಇಲ್ಲದವರು ಮಾತನಾಡುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಲ ಎಷ್ಟೆಂದು ಕೊಡಲು ಆಗುತ್ತದೆ? ಬಾಯಿ ಚಪಲಕ್ಕೆ ಏನೇನೋ ಮಾತನಾಡುವವರಿಗೆಲ್ಲ ಉತ್ತರ ಕೊಡಲು ಆಗದು ಎಂದರು.
Advertisement