

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೊಡೆತ ಬೀಳಬಹುದೆಂಬ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ನಂತರ ಪಕ್ಷ ನೀಡುವ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧನಿರುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಎಕ್ಸಿಟ್ ಪೋಲ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನನಗೆ ವೈಯಕ್ತಿಕವಾಗಿ ಎಕ್ಸಿಟ್ ಪೋಲ್ಗಳಲ್ಲಿ ನಂಬಿಕೆ ಇಲ್ಲ. ಕರ್ನಾಟಕದಲ್ಲಿ ಎಕ್ಸಿಟ್ ಪೋಲ್ ಊಹೆಗಳು ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಎಂದು ಹೇಳಿದರು.
ತಳಮಟ್ಟದಲ್ಲಿ ಸಮಯ ಕಳೆಯುವವರಿಗೆ ಮಾತ್ರ ವಾಸ್ತವತೆ ತಿಳಿದಿದೆ. ಎಕ್ಸಿಟ್ ಪೋಲ್ಗಳು ಮಾದರಿ ಆಧಾರಿತವಾಗಿವೆ ಮತ್ತು ರಾಜ್ಯದ ಸಂಪೂರ್ಣ ಚಿತ್ರವನ್ನು ಪ್ರತಿಬಿಂಬಿಸುವುದಿಲ್ಲ ಎಂದರು.
ಕೆಲ ರಾಜ್ಯಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳ ಊಹೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಅಗತ್ಯವಿದ್ದರೆ ಪಕ್ಷದ ನಿರ್ದೇಶನದಂತೆ ಕೆಲಸ ಮಾಡುತ್ತೇನೆ ಎಂದರು.
ಶಿವಕುಮಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸಿದ್ದರಿಂದ ಈ ಹೇಳಿಕೆಗಳು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿವೆ.