ಬೆಳಗಾವಿ: ಸ್ಪೀಕರ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಅವರು ಉದ್ದೇಶಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು, ಕರ್ನಾಟಕ ವಿಧಾನಸಭೆಯಲ್ಲಿ ಮುಸ್ಲಿಂ ಸ್ಪೀಕರ್ (ಯುಟಿ ಖಾದರ್) ಮುಂದೆ ಬಿಜೆಪಿ ನಾಯಕರು ಕೈಮುಗಿದು, ತಲೆಬಾಗಿ ನಿಲ್ಲುತ್ತಾರೆ. ಕಾಂಗ್ರೆಸ್ ನೀಡಿದ ಅವಕಾಶಕ್ಕೆ ಧನ್ಯವಾದಗಳು ಎಂದು ಹೇಳಿದ್ದರು.
'ಯಾಕೆ..... ಅವರು (ಜಮೀರ್) ಉದ್ದೇಶಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ' ಎಂದು ಸಿದ್ದರಾಮಯ್ಯ ಅವರು ಖಾನ್ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಕೇಳುವುದಾಗಿ ಬಿಜೆಪಿ ಹೇಳಿದೆ.
ಸ್ಪೀಕರ್ ಬಗ್ಗೆ ಖಾನ್ ಹೇಳಿಕೆಗೆ ತಿರುಗೇಟು ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಅವರ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ಮತ್ತು ದಲಿತರ ವಿರೋಧಿಯಾಗಿದ್ದು, ಅವರು ಲಘುವಾಗಿ ಪರಿಗಣಿಸಬಾರದು. ಕೂಡಲೇ ಜಮೀರ್ ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದರು.
ಈಮಧ್ಯೆ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ನಾವು ತೆಲಂಗಾಣದಲ್ಲಿ ಗೆದ್ದಿದ್ದೇವೆ. ಇತರ ಮೂರು ರಾಜ್ಯಗಳಲ್ಲಿ ನಾವು ಸೋತಿದ್ದೇವೆ. ಜನರ ತೀರ್ಮಾನವೇ ಅಂತಿಮ. ನಾವು ಅದನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳುತ್ತೇವೆ ಮತ್ತು ಸೋಲಿನಿಂದ ಪಾಠ ಕಲಿಯುತ್ತೇವೆ' ಎಂದರು.
Advertisement