ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅನ್ನು ಟೀಕಿಸಿದ್ದಕ್ಕಾಗಿ ಮತ್ತು ಮೋದಿ ಸರ್ಕಾರದ ಅಡಿಯಲ್ಲಿ ಅದು ದುರ್ಬಲಗೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯದ ಆಡಳಿತಾರೂಢ ಬಿಜೆಪಿ ಕಿಡಿಕಾರಿದೆ
ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದೆ.
ಸೋಮವಾರ ತಡರಾತ್ರಿ ಟ್ವೀಟ್ ಮಾಡಿರುವ ರಾಜ್ಯದ ಆರೋಗ್ಯ ಸಚಿವ ಕೆ. ಸುಧಾಕರ್ ಅವರು, ‘ಮೈಸೂರು ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಬೆಳೆಸಿದ ಎಚ್ಎಎಲ್ ಕರ್ನಾಟಕದ ಹೆಮ್ಮೆ ಮತ್ತು ಭಾರತದ ಅಮೂಲ್ಯ ರತ್ನವಾಗಿದೆ' ಎಂದಿದ್ದಾರೆ.
2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಚ್ಎಎಲ್ ಅನ್ನು ದುರ್ಬಲಗೊಳಿಸುತ್ತಿದೆ ಎಂದು ಆಧಾರರಹಿತ ಆರೋಪ ಮಾಡಿದ್ದರು.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಎಚ್ಎಎಲ್ನ ಹೆಲಿಕಾಪ್ಟರ್ ಕಾರ್ಖಾನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದು ಏಷ್ಯಾದ ಅತಿದೊಡ್ಡ ಚಾಪರ್ ಉತ್ಪಾದನಾ ಘಟಕವಾಗಿದ್ದು, ಘಟಕವು ಮುಂದಿನ 20 ವರ್ಷಗಳಲ್ಲಿ 4 ಲಕ್ಷ ಕೋಟಿ ರೂಪಾಯಿಗಳ ಯೋಜಿತ ವ್ಯವಹಾರ ಮೌಲ್ಯದೊಂದಿಗೆ 1,000 ಹೆಲಿಕಾಪ್ಟರ್ಗಳನ್ನು ತಯಾರಿಸಲು ಉದ್ದೇಶಿಸಿದೆ.
ಇದು ಭಾರತವು ಆಮದು ಮಾಡಿಕೊಳ್ಳದೆ ಹೆಲಿಕಾಪ್ಟರ್ಗಳ ಸಂಪೂರ್ಣ ಅವಶ್ಯಕತೆಯನ್ನು ಪೂರೈಸಲು ಅನುವು ಮಾಡಿಕೊಡುತ್ತದೆ ಮತ್ತು ಹೆಲಿಕಾಪ್ಟರ್ ವಿನ್ಯಾಸ, ಅಭಿವೃದ್ಧಿ ಮತ್ತು ತಯಾರಿಕೆಯಲ್ಲಿ ಪ್ರಧಾನ ಮಂತ್ರಿಯವರ 'ಆತ್ಮನಿರ್ಭರ್ ಭಾರತ್' ದೃಷ್ಟಿಕೋನಕ್ಕೆ ಪೂರಕವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಜಿಗಿಯುತ್ತಿರುವ ಮತ್ತು ಹೊಸ ಎತ್ತರಕ್ಕೆ ಏರುತ್ತಿರುವ ಎಚ್ಎಎಲ್ ಕುರಿತು ರಾಷ್ಟ್ರವನ್ನು ದಾರಿ ತಪ್ಪಿಸಿದ್ದಕ್ಕಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಈಗ ಕ್ಷಮೆಯಾಚಿಸುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕಾಮಗಾರಿಗಳ ಉದ್ಘಾಟನೆಗಾಗಿಯೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ' ಎಂದು ದೂರಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪಿಸುವ ಪ್ರಸ್ತಪನೆ ಸಲ್ಲಿಸಲಾಗಿತ್ತು ಮತ್ತು ಅದಕ್ಕಾಗಿ ಗ್ರೌಂಡ್ ವರ್ಕ್ ಅನ್ನು ಮಾಡಲಾಗಿತ್ತು. ಈಗ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದಾರೆ' ಎಂದು ಹೇಳಿದರು.
Advertisement