ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಿಂದ ಒಡೆದು ಆಳುವ ನೀತಿ: ಕೈ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಾಗ್ದಾಳಿ

ಲೋಕಾಯುಕ್ತವನ್ನು ಮುಚ್ಚುವ ಮೂಲಕ‌ ಭ್ರಷ್ಟಾಚಾರ ಪೋಷಿಸಿದವರು ಸಿದ್ದರಾಮಯ್ಯ. ಆದರೆ ಬಸವರಾಜ ಬೊಮ್ಮಾಯಿ ಅವರು ಲೋಕಾಯುಕ್ತದ ಬಲವರ್ಧನೆ ಮಾಡುವ ಮೂಲಕ‌ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
ಜೆ.ಪಿ ನಡ್ಡಾ
ಜೆ.ಪಿ ನಡ್ಡಾ

ಹಾಸನ:  ಲೋಕಾಯುಕ್ತವನ್ನು ಮುಚ್ಚುವ ಮೂಲಕ‌ ಭ್ರಷ್ಟಾಚಾರ ಪೋಷಿಸಿದವರು ಸಿದ್ದರಾಮಯ್ಯ. ಆದರೆ ಬಸವರಾಜ ಬೊಮ್ಮಾಯಿ ಅವರು ಲೋಕಾಯುಕ್ತದ ಬಲವರ್ಧನೆ ಮಾಡುವ ಮೂಲಕ‌ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.

ಹಾಸನದಲ್ಲಿ ವಿಜಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತದೆ. ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವಿವಿಧ ಸಂದರ್ಭಗಳಲ್ಲಿ ರಾಷ್ಟ್ರವಿರೋಧಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು ಕಾಂಗ್ರೆಸ್ ಅನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು.ಆಡಳಿತ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ರಾಷ್ಟ್ರೀಯ ಅಧ್ಯಕ್ಷರು ಹೇಳಿದರು.

ರಾಜ್ಯ ಮತ್ತು ಕೇಂದ್ರ ಬಜೆಟ್‌ಗಳು ಜನಸಾಮಾನ್ಯರು, ರೈತರು ಮತ್ತು ಬಡವರ ಹಿತಾಸಕ್ತಿಗಳನ್ನು ಕಾಪಾಡುವ ಪ್ರಸ್ತಾಪಗಳೊಂದಿಗೆ ಬರುತ್ತಿವೆ ಎಂದು ಶ್ಲಾಘಿಸಿದ ನಡ್ಡಾ, ರಾಜ್ಯ ಮತ್ತು ಕೇಂದ್ರವು ನಿರ್ಲಕ್ಷಿತ ಜನರನ್ನು ಗುರಿಯಾಗಿಟ್ಟುಕೊಂಡು ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿಶ್ವದಲ್ಲೇ ಅತ್ಯುತ್ತಮ ಆರ್ಥಿಕವಾಗಿ ಸ್ಥಿರ ರಾಷ್ಟ್ರಗಳಲ್ಲಿ ಒಂದಾಗಿ ಗುರುತಿಸಲ್ಪಟ್ಟಿರುವ ಭಾರತವನ್ನು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದೆ ಎಂದು ನಡ್ಡಾ ಹೇಳಿದರು. ಅಭಿವೃದ್ಧಿ ಹೊಂದಿದ ದೇಶಗಳು ಭಾರತದ ಆರ್ಥಿಕ ನೀತಿಗಳ ಮೇಲೆ ಕಣ್ಣಿಟ್ಟಿವೆ ಎಂದರು.

ರಾಷ್ಟ್ರವನ್ನು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಪಡಿಸುವುದು ಬಿಜೆಪಿಯ ಏಕೈಕ ಅಜೆಂಡಾವಾಗಿದೆ ಎಂದು ಅವರು ಹೇಳಿದರು. ಭಾರತವು ಆಟೋಮೊಬೈಲ್, ಕೃಷಿ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್ತಿದೆ. ಕೇಂದ್ರ ಸರ್ಕಾರ ವಾರ್ಷಿಕ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆದ್ಯತೆ ನೀಡಿದೆ  ಎಂದು ಮಾಹಿತಿ ನೀಡಿದರು.

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹತ್ತಾರು ವರ್ಷಗಳಿಂದ ಜೆಡಿಎಸ್ ಶಾಸಕರ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವಿಫಲವಾಗಿವೆ ಎಂದು ಆರೋಪಿಸಿದರು. ನೀರಾವರಿ ಸೇರಿದಂತೆ ಆದ್ಯತಾ ಕ್ಷೇತ್ರಗಳನ್ನೂ ಕಾಂಗ್ರೆಸ್ ಮತ್ತು ಜೆಡಿಎಸ್ ಕಡೆಗಣಿಸಿದೆ ಎಂದು ಆರೋಪಿಸಿದರು.

ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ವಿಶ್ವ ಪಾರಂಪರಿಕ ತಾಣಗಳಿಗೆ ನಾಮನಿರ್ದೇಶನಗೊಂಡ ವಿಶ್ವವಿಖ್ಯಾತ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದೆ ಎಂದು ಸಿಎಂ ಹೇಳಿದರು. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ 1800 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಬಿಜೆಪಿ ಸಂಘಟಿತವಾಗಿದೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಚುಕ್ಕಾಣಿ ಹಿಡಿಯಲಿದೆ ಉತ್ತಮ ಆಡಳಿತ ಮುಂದುವರಿಸುವ‌ ಕೆಲಸ ಮಾಡಲಿದೆ‌ ಎಂದರು.

ಐದು ವರ್ಷ ಕಾಂಗ್ರೆಸ್, ಒಂದೂವರೆ ವರ್ಷ ಸಮ್ಮಿಶ್ರ ಸರ್ಕಾರಕ್ಕೆ ಅವಕಾಶ ಕೊಟ್ಟಿರಿ. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಅನೇಕ ಯೊಜನೆ ಅನುಷ್ಠಾನಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರಣ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com