'ನಿನ್ನ ಮನೆ ಹಾಳಾಗ..': ಕಾಂಗ್ರೆಸ್ ಸರ್ಕಾರದ ಯೋಜನೆ ಸ್ಥಗಿತಕ್ಕೆ ಸಿಎಂ ವಿರುದ್ಧ ಸಿದ್ದು ಗರಂ, ಸ್ವಪಕ್ಷೀಯರ ವೈಫಲ್ಯದ ಬಗ್ಗೆಯೂ ತೀವ್ರ ಅಸಮಾಧಾನ!
ಹಾಸನ: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಾಯಕರು ಜೆಡಿ(ಎಸ್) ಹಾಗೂ ಬಿಜೆಪಿ ನಾಯಕರನ್ನು ಟೀಕಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂಬುದು ಸಿದ್ದರಾಮಯ್ಯ ಅವರ ಅಸಮಾಧಾನಕ್ಕೆ ಕಾರಣವಾಗಿದೆ.
ಹಾಸನದಲ್ಲಿ ನಡೆದ ಪಕ್ಷದ ಪ್ರಜಾ ಧ್ವನಿ ಯಾತ್ರೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರ ವೈಫಲ್ಯಗಳು ಹಾಗೂ ಅಕ್ರಮಗಳು ತಿಳಿದಿದ್ದರೂ ಬಹುತೇಕ ಕಾಂಗ್ರೆಸ್ ನಾಯಕರು ಸಾರ್ವಜನಿಕ ರ್ಯಾಲಿಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದಿಲ್ಲ ಎಂದು ಹೇಳಿದ್ದಾರೆ.
ಯಾತ್ರೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೆವಾಲ, ಮಾಜಿ ಸಚಿವ ಹೆಚ್ಎಂ ರೇವಣ್ಣ, ಹಾಗೂ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಉಪಸ್ಥಿತರಿದ್ದರು.
35 ನಿಮಿಷಗಳ ಭಾಷಣದಲ್ಲಿ ಸಿದ್ದರಾಮಯ್ಯ ನಿರಂತರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರನ್ನು ಟೀಕಿಸಿದರು. ತಾವು ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ಥಗಿತಗೊಳಿಸಿದ್ದಾರೆ. ಬಿಜೆಪಿ ಬಡವರ, ರೈತ, ಯುವಕರು, ಮಹಿಳೆಯರು, ಕಾರ್ಮಿಕರು, ದಲಿತರ ವಿರೋಧಿ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ಮುಂದುವರೆಸದ ಬೊಮ್ಮಾಯಿ ಸರ್ಕಾರಕ್ಕೆ "ನಿನ್ನ ಮನೆ ಹಾಳಾಗ" ಎಂದು ಶಪಿಸಿದ್ದು, ಶ್ರೀಮಂತ ಜನರ ಪರವಾಗಿ ಬಿಜೆಪಿ ಸರ್ಕಾರ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ