ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾರರ ಓಲೈಸಲು ಪ್ರತಿ ಜಿಲ್ಲೆಯಲ್ಲೂ ಬಿರುಸಿನ ಪ್ರಚಾರಕ್ಕೆ ಪ್ರಧಾನಿ ಮೋದಿ ಮುಂದು!

ಗುಜರಾತ್ ರಾಜ್ಯ ಚುನಾವಣೆ ಬಳಿಕ ಇದೀಗ ಕರ್ನಾಟಕದತ್ತ ಮುಖ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಜನರ ಮನಗೆಲ್ಲಲು ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಗುಜರಾತ್ ರಾಜ್ಯ ಚುನಾವಣೆ ಬಳಿಕ ಇದೀಗ ಕರ್ನಾಟಕದತ್ತ ಮುಖ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಜನರ ಮನಗೆಲ್ಲಲು ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಇನ್ನೆರಡು ತಿಂಗಳುಗಳಲ್ಲಿ ಚುನಾವಣೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ಕೇಂದ್ರದ ನಾಯಕರು ಪಕ್ಷದ ಕಾರ್ಯಕ್ರಮಗಳು ಹಾಗೂ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಬೆಂಗಳೂರಿಗೆ ನಿರಂತರ ಭೇಟಿ ನೀಡುತ್ತಿದ್ದಾರೆ. ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳನ್ನೇ ಬಿಜೆಪಿ ಇದೀಗ ಪ್ರಚಾರ ಕಾರ್ಯಕ್ರಮಗಳನ್ನಾಗಿ ಬಳಕೆ ಮಾಡಿಕೊಳ್ಳುತ್ತಿದೆ.

ಕಳೆದ ಸೆಪ್ಟೆಂಬರ್ ತಿಂಗಳಿನಿಂದಲೂ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಲೇ ಬಂದಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ನಂತರ, ಪಕ್ಷವು ತನ್ನದೇ ಕಾರ್ಯಕರ್ತರಿಂದ ಆಕ್ರೋಶಗಳನ್ನು ಎದುರಿಸುತ್ತಿದೆ. ಹೀಗಾಗಿ ಮೋದಿಯವರ ಭೇಟಿ ಕಾರ್ಯಕ್ರಮದಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನವನ್ನು ತರಲು ಸಹಾಯ ಮಾಡಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ ಬಳಿಕ ಮೋದಿಯವರು ನವೆಂಬರ್ ತಿಂಗಳಿನಲ್ಲಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಮೇಲೆ ಕೇಂದ್ರೀಕರಿಸಿದ್ದರು. ಬೇಟಿ ವೇಳೆ ವಂದೇ ಭಾರತ್ ಚೆನ್ನೈ-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಬಳಿಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಿದರು ಮತ್ತು 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ನಂತರ ಈ ತಿಂಗಳ ಆರಂಭದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವದಲ್ಲಿ (ಯುವಜನೋತ್ಸವ) ಮೋದಿಯವರು ಭಾಗವಹಿಸಿದ್ದರು. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಮೋದಿಯವರ ಕಾರ್ಯಕ್ರಮದಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಬಂಜಾರ ಸಮುದಾಯದವರಿಗೆ ಹಕ್ಕುಪತ್ರಗಳನ್ನೂ ವಿತರಿಸಲಾಯಿತು.

ಫೆಬ್ರವರಿಯಲ್ಲಿ ಮೋದಿಯವರು ಎರಡರಿಂದ ಮೂರು ಬಾರಿ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಗಣಿಗಾರಿಕೆ ಶಾಲೆಯೊಂದರ ಶಂಕುಸ್ಥಾಪನೆಯನ್ನೂ ಇದೇ ವೇಳೆ ಮೋದಿಯವರು ನೆರವೇರಿಸುವ ನಿರೀಕ್ಷೆಯಿದೆ.

ಮೋದಿ ಪಾಲ್ಗೊಳ್ಳುವ ನಿರೀಕ್ಷೆಯಿರುವ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಇದ್ದು,  ಚಿಕ್ಕಬಳ್ಳಾಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೂಡ ಲೋಕಾರ್ಪಣೆಗೊಳ್ಳಲು ಮೋದಿಯವರ ಸಮಯಕ್ಕಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ ತಿಂಗಳಿನಲ್ಲಿ ತುಮಕೂರಿನ ಗುಬ್ಬಿ ತಾಲೂಕಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಹೆಲಿಕಾಪ್ಟರ್ ಸೌಲಭ್ಯಕ್ಕೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಹುತೇಕ ಸಿದ್ಧವಾಗಿದ್ದು, ಮಾರ್ಚ್‌ನಲ್ಲಿ ಮೋದಿ ಉದ್ಘಾಟಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.

ಪಕ್ಷ ದುರ್ಬಲವಾಗಿರುವ, ವಿವಿಧ ಕಾರಣಗಳಿಂದ ನಕಾರಾತ್ಮಕ ಪರಿಣಾಮಗಳನ್ನು ಎದುರಿಸುತ್ತಿರುವ ಜಿಲ್ಲೆಗಳು ಮತ್ತು ಪ್ರದೇಶಗಳಿಗೆ ಮೋದಿ ಭೇಟಿ ನೀಡುತ್ತಿದ್ದಾರೆಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಇನ್ನು ಕೆಲವೇ ವಾರಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ಮೋದಿಯವರು ಭೇಟಿ ನೀಡಲಿದ್ದು, ನಂತರ ಅಂತಿಕವಾಗಿ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿಯವರು ಭೇಟಿ ನೀಡಿದ ಎಲ್ಲಾ ಪ್ರದೇಶಗಳಿಗೂ ರಾಜ್ಯ ನಾಯಕರೂ ಕೂಡ ಭೇಟಿ ನೀಡಲಿದ್ದಾರೆ. ಆದರೆ, ಮೋದಿಯವರ ಭೇಟಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ನಾಯಕರೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com