

ಹಾಸನ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ವಾಗ್ದಾಳಿ ನಡೆಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಿಸಿರುವುದೇ ಪ್ರಚಾರದ ಪ್ರಮುಖ ವಿಚಾರವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಜಕೀಯ ದ್ವೇಷಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿರುವುದು ಇದೇ ಮೊದಲು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ಉಚಿತ ಯೋಜನೆಗಳನ್ನು ಜಾರಿಗೆ ತಲುವ ಮೂಲಕ ಜನಪ್ರಿಯತೆ ಗಳಿಸುತ್ತಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಬಿಜೆಪಿಗೆ ಎದುರಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವು ಉಚಿತ ಅಕ್ಕಿ ಯೋಜನೆಯನ್ನು ಜಾರಿಗೆ ತರುತ್ತಿದೆ, ಆದರೆ, ಕೇಂದ್ರ ಸರ್ಕಾರವು ಇದಕ್ಕೆ ಸಹಕಾರ ನೀಡುತ್ತಿಲ್ಲ. ಯೋಜನೆಗೆ ಹಿನ್ನಡೆಯುಂಟು ಮಾಡಲು ಸಂಚು ರೂಪಿಸಿದೆ. ಕೇಂದ್ರ ಸರ್ಕಾರ ಬಡವರು ಮತ್ತು ಜನಸಾಮಾನ್ಯರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.
ರ್ಯಾಲಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನದ ಮೇಲೆ ಆಸೆ ಇಲ್ಲ, ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆಗಳಿವ ಎಂದರು.