40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆದು, ಎಎಪಿಗೆ ಒಂದು ಅವಕಾಶ ಕೊಡಿ: ಕೇಜ್ರಿವಾಲ್
ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...
Published: 04th March 2023 05:56 PM | Last Updated: 04th March 2023 08:06 PM | A+A A-

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದಾವಣಗೆರೆ: ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಇಂದು ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತ ವಿದ್ಯುತ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದಾಗಿ ಭರವಸೆ ನೀಡಿದರು.
ದೆಹಲಿ ಮತ್ತು ಪಂಜಾಬ್ ನಲ್ಲಿ ನಾವೇನು ಮಾಡಿದ್ದೇವೆ ಎಂಬದು ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನು ಓದಿ: ಸಿಸೋಡಿಯಾ ಇಂದು ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಬಿಡುಗಡೆ: ಕೇಜ್ರಿವಾಲ್
ಡಬಲ್ ಎಂಜಿನ್ ಸರ್ಕಾರ ತರುತ್ತೇವೆ ಎಂದು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಜನ ಅದನ್ನು ನಂಬಿ ಅಧಿಕಾರವನ್ನೂ ನೀಡಿದರು. ಡಬಲ್ ಎಂಜಿನ್ ಸರ್ಕಾರ ಬಂದು ಇಲ್ಲಿ ಭ್ರಷ್ಟಾಚಾರವೇ ಡಬಲ್ ಆಯಿತು. 20 ಪರ್ಸೆಂಟ್ ಇದ್ದಿದ್ದು 40 ಪರ್ಸೆಂಟ್ ಆಯಿತು ಎಂದು ದೆಹಲಿ ಸಿಎಂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮವಾಗಿ ರೂಪಿಸಿದ್ದೇವೆ. ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ಉಚಿತ ಸಮವಸ್ತರ ನೀಡಿದ್ದೇವೆ. ದೆಹಲಿ ಜನರಿಗೆ ಉತ್ತಮ ಆಸ್ಪತ್ರೆ ಸೌಲಭ್ಯ ಉಚಿತವಾಗಿ ಒದಗಿಸಿದ್ದೇವೆ. ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣ, 200 ಯುನಿಟ್ ವಿದ್ಯುತ್ ಉಚಿತ ಹೀಗೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.