ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷ ನಿರ್ಧರಿಸಲಿದೆ: ಟಿಕೆಟ್ ಹೇಳಿಕೆ ಕುರಿತು ಯಡಿಯೂರಪ್ಪ ಸ್ಪಷ್ಟನೆ

ಪಕ್ಷದ ಕೆಲ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ಸಿಗದಿರುವ ಕುರಿತು ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಬಿಎಸ್.ಯಡಿಯೂರಪ್ಪ
ಬಿಎಸ್.ಯಡಿಯೂರಪ್ಪ

ಬೆಳಗಾವಿ: ಪಕ್ಷದ ಕೆಲ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ಸಿಗದಿರುವ ಕುರಿತು ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕೋಡಿ ಸಮೀಪದ ಅಂಕಲಿಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ ಅವರು, ಈ ಹಿಂದೆ ನೀಡಿದ್ದ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ, ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಪಕ್ಷದ ಹೈಕಮಾಂಡ್ ಸಮೀಕ್ಷೆಯ ವರದಿಯನ್ನು ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಸಚಿವ ಸೋಮಣ್ಣ ಬಿಜೆಪಿ ತೊರೆಯುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿ, ಸೋಮಣ್ಣ ಪಕ್ಷ ತೊರೆಯುವುದಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಮಾತನಾಡುತ್ತೇನೆಂದು ಹೇಳಿದರು.

ವಿಜಯ ಸಂಕಲ್ಪ ಯಾತ್ರೆಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚುನಾವಣೆಯಲ್ಲಿ ಪಕ್ಷ 150 ಸ್ಥಾನ ಗೆಲ್ಲುವುದು ಖಚಿತ. ಮುಂದಿನ ದಿನಗಳಲ್ಲಿ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಪಕ್ಷದ ಗುರಿ ತಲುಪುವಂತೆ ಮಾಡುತ್ತೇನೆ ಎಂದರು.

ಬಳಿಕ ಪ್ರಧಾನಿ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿಯಾಗಬೇಕೆಂಬ ಇಬ್ಬರೂ ನಾಯಕರ ಕನಸು ಎಂದಿಗೂ ನನಸಾಗುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com