ಟಿಕೆಟ್‌ ಕೇಳಿದರೆ ಎಷ್ಟು ಕೋಟಿ ಹಣವಿದೆ ಎಂದು ನಾಯಕರು ಕೇಳುತ್ತಾರೆ?; 'ಗಂಟು' ನೀಡುತ್ತಿರುವ ಭಟ್ಟಂಗಿಗಳಿಗೆ ಮಾತ್ರ ಬೆಲೆ: ತೀ.ನಾ. ಶ್ರೀನಿವಾಸ್

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.
ತೀ.ನಾ. ಶ್ರೀನಿವಾಸ್
ತೀ.ನಾ. ಶ್ರೀನಿವಾಸ್
Updated on

ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಂದ ಪಕ್ಷದ ಮುಖಂಡರು ಹಣವನ್ನು ಮಾತ್ರ ನಿರೀಕ್ಷಿಸುತ್ತಿದ್ದಾರೆ. ಗಂಟು ನೋಡುತ್ತಾರೆಯೇ ವಿನಾ ಪ್ರಾಮಾಣಿಕತೆಗೆ ಬೆಲೆ ನೀಡುತ್ತಿಲ್ಲ ಎಂದು ಅವರು  ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ಸಂಘಟಿತವಾಗಿ ಕೆಲಸ ಮಾಡದ ಕಾರಣ ತಾವು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕಾಂಗ್ರೆಸ್ ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖ ತಿ ನಾ ಶ್ರೀನಿವಾಸ್ ಅವರು ಘೋಷಿಸಿದರು.

ಕಾಂಗ್ರೆಸ್‌ ತೊರೆದರೂ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ ಎಂದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಹಣವಿದ್ದವರಿಗೆ ಮಾತ್ರ ಮಣೆ ಹಾಕುತ್ತಿದೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳಿಗೆ, ಹಣವಿಲ್ಲದವರಿಗೆ ಬೆಲೆ ನೀಡುವುದಿಲ್ಲ. ಎಲ್ಲಾ ಪಕ್ಷಗಳು ಚುನಾವಣೆಯನ್ನು ವ್ಯಾಪಾರ ಮಾಡಿಕೊಂಡಿವೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರತಿಪಕ್ಷವಾಗಿ ತನ್ನ ಕೆಲಸ ಸರಿಯಾಗಿ ಮಾಡಿಲ್ಲ. ಭಟ್ಟಂಗಿಗಳಿಗೆ ಮಾತ್ರ ಬೆಲೆ ನೀಡುತ್ತಿದೆ. 37 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದವರನ್ನು ಮೂಲೆ ಗುಂಪು ಮಾಡಿ, ಇತ್ತೀಚಿಗೆ ಪಕ್ಷಕ್ಕೆ ಸೇರಿದವರಿಗೆ ಉನ್ನತ ಹಂತದ ಸ್ಥಾನಮಾನ ನೀಡಿದ್ದಾರೆ ಎಂದು ಆರೋಪಿಸಿದರು. ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.

ಶರಾವತಿ ಸಂತ್ರಸ್ತರು, ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಿಸುವುದು ತಮ್ಮ ಗುರಿಯಾಗಿದ್ದು, ಮಲೆನಾಡು ರೈತ ಹೋರಾಟ ಸಮಿತಿಯ ಮೂಲಕ ಹೋರಾಟ ತೀವ್ರಗೊಳಿಸಲಿದ್ದೇನೆ. ಸಾಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com