ಕಾಂಗ್ರೆಸ್ ಕರ್ನಾಟಕವನ್ನು ತನ್ನ ಎಟಿಎಂ ಮಾಡಿಕೊಂಡು ಬೊಕ್ಕಸ ತುಂಬಿಸಿಕೊಳ್ಳಲು ಬಯಸುತ್ತಿದೆ: ಅಮಿತ್ ಶಾ

ದೇಶದಾದ್ಯಂತ ಕಾಂಗ್ರೆಸ್ ಅಧೋಗತಿಗೆ ಹೋಗುತ್ತಿದ್ದು, ಇದೀಗ ರಾಜ್ಯವನ್ನು ತನ್ನ ಎಟಿಎಂ ಆಗಿ ಮಾಡಲು ಮತ್ತು ರಾಷ್ಟ್ರಮಟ್ಟದಲ್ಲಿ ತನ್ನ ಬೊಕ್ಕಸವನ್ನು ತುಂಬಿಸಿಕೊಳ್ಳಲು ಕರ್ನಾಟಕದತ್ತ ದೃಷ್ಟಿ ನೆಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಕರ್ನಾಟಕ ಸಹಕಾರ ಇಲಾಖೆ ಹಾಗೂ ಇತರೆ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಫಲಾನುಭವಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕರ್ನಾಟಕ ಸಹಕಾರ ಇಲಾಖೆ ಹಾಗೂ ಇತರೆ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಫಲಾನುಭವಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ದೇಶದಾದ್ಯಂತ ಕಾಂಗ್ರೆಸ್ ಅಧೋಗತಿಗೆ ಹೋಗುತ್ತಿದ್ದು, ಇದೀಗ ರಾಜ್ಯವನ್ನು ತನ್ನ ಎಟಿಎಂ ಆಗಿ ಮಾಡಲು ಮತ್ತು ರಾಷ್ಟ್ರಮಟ್ಟದಲ್ಲಿ ತನ್ನ ಬೊಕ್ಕಸವನ್ನು ತುಂಬಿಸಿಕೊಳ್ಳಲು ಕರ್ನಾಟಕದತ್ತ ದೃಷ್ಟಿ ನೆಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ಕರ್ನಾಟಕ ಸಹಕಾರ ಇಲಾಖೆ ಹಾಗೂ ಇತರೆ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಫಲಾನುಭವಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅರೆಬರೆ ಅಪೂರ್ಣ ಸರ್ಕಾರ ನೀಡಬೇಡಿ. ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು.

'ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಧೋಗತಿಗೆ ಹೋಗುತ್ತಿದೆ, ಕಾಂಗ್ರೆಸ್‌ನ ಬಳಿ ಪಕ್ಷದ ಕೇಂದ್ರ ಖಜಾನೆ ತುಂಬುವ ಯಾವ ರಾಜ್ಯವೂ ಇಲ್ಲ. ಅವರಿಗೆ ಎಟಿಎಂ ಬೇಕು. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ನ ಎಟಿಎಂ ಆಗಬೇಕು ಎಂದು ಬಯಸಿದ್ದು, ಭ್ರಷ್ಟ ಕಾಂಗ್ರೆಸ್‌ನ ಕಣ್ಣು ಈಗ ಕರ್ನಾಟಕದತ್ತ ನೆಟ್ಟಿದೆ' ಎಂದು ಶಾ ಹೇಳಿದರು.

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆಯೇ ಅಥವಾ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆಯೇ ಎಂದು ಜನರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಎಲ್ಲೆಲ್ಲಿ ಸರ್ಕಾರ ರಚಿಸಿದೆಯೋ ಅಲ್ಲೆಲ್ಲ ಭ್ರಷ್ಟಾಚಾರ, ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಅವಮಾನ, ದೇಶವಿರೋಧಿ ಶಕ್ತಿಗಳನ್ನು ಬಲಪಡಿಸುವುದೇ ಅವರ ಇತಿಹಾಸವಾಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಕರ್ನಾಟಕ ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

'ಮೋದಿ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಅನ್ನು ನಿಷೇಧಿಸಿದೆ. ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ (ಹಿಂದೆ) ಪಿಎಫ್‌ಐ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿತ್ತು. ಆದರೆ, ನರೇಂದ್ರ ಮೋದಿ ಸರ್ಕಾರ ಪಿಎಫ್‌ಐ ಅನ್ನು ನಿಷೇಧಿಸುವ ಮೂಲಕ ಇಡೀ ದಕ್ಷಿಣ ಭಾರತವನ್ನು ಮತ್ತು ಇಡೀ ದೇಶವನ್ನು ಸುಭದ್ರಗೊಳಿಸಿದೆ' ಎಂದರು. 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು 70 ವರ್ಷಗಳಿಂದ 'ವಿಳಂಬ, ಅಡ್ಡಿ ಮತ್ತು ದಾರಿ ತಪ್ಪಿಸುತ್ತಿದೆ'. ಆದರೆ, ಮೋದಿ ಅವರು ಮಂದಿರಕ್ಕೆ ಅಡಿಪಾಯ ಹಾಕಿದ್ದಾರೆ ಮತ್ತು ಅದು ಶೀಘ್ರದಲ್ಲೇ ಸಿದ್ಧವಾಗಲಿದೆ. ಪ್ರಧಾನಿ ಮೋದಿಯವರು 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಇಡೀ ದೇಶದಲ್ಲಿ ಭಯೋತ್ಪಾದನೆಗೆ ಕಡಿವಾಣ ಹಾಕಿದ್ದಾರೆ. ಇಡೀ ದೇಶವನ್ನು ಸಮೃದ್ಧಗೊಳಿಸುವುದು, ಕರ್ನಾಟಕ ಸೇರಿದಂತೆ ಪ್ರತಿಯೊಂದು ರಾಜ್ಯವನ್ನು ಮುನ್ನಡೆಸುವುದು ಮೋದಿಯವರ ಧ್ಯೇಯವಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com