ಕರ್ನಾಟಕ ವಿಧಾನಸಭೆ ಚುನಾವಣೆ: ಒಂದೇ ಹಂತದಲ್ಲಿ ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ವಿಧಾನಸೌಧ
ವಿಧಾನಸೌಧ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ ಮತ್ತು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟ ಏಪ್ರಿಲ್ 20 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.  ಮೇ 10 ರ ಬುಧವಾರ ಮತದಾನ ನಡೆಯಲಿದ್ದು, ಮೇ 15 ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈಶಾನ್ಯದ ಮೂರು ರಾಜ್ಯಗಳ ಚುನಾವಣೆ ಸಕ್ಸಸ್ ಆಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ನಮ್ಮ ಪ್ರಯತ್ನ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು. ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.

ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ. ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆʼ  ಜಾರಿಗೆ ಬಂದಿದೆ. ರಾಜಕೀಯ ನಾಯಕರು, ಪಕ್ಷಗಳು, ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇಕಾಗುತ್ತದೆ.

ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಆಯೋಗ ಕ್ರಮ ಕೈಗೊಳ್ಳಲಿದೆ. ಬೆಂಗಳೂರಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಇದನ್ನು ತಡೆಯಲು ಪರಿಹಾರ ಕಂಡುಕೊಳ್ಳಲು ಎಲೆಕ್ಟ್‌ಥಾನ್ ಕೈಗೊಳ್ಳಲು ಮುಂದಾಗಿದ್ದೇವೆ. ಐಐಎಸ್ಸಿ ಇದರಲ್ಲಿ ಕೈಜೋಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com