ಬಿಜೆಪಿ ನಾಯಕರು ಚುನಾವಣೆಗಾಗಿ ರಾಜ್ಯಕ್ಕೆ ಬರುತ್ತಾರೆ ಹೊರತು ಆಪತ್ಕಾಲಕ್ಕಲ್ಲ: ಕುಮಾರಸ್ವಾಮಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಕೇಂದ್ರ ಬಿಜೆಪಿ ನಾಯಕರು ಕರ್ನಾಟಕಕ್ಕೆ ಚುನಾವಣೆ ಸಮಯದಲ್ಲಿ ಮಾತ್ರ ಬರುತ್ತಾರೆಯೇ ಹೊರತು ಪ್ರವಾಹ, ಬರ ಮತ್ತು ಇತರ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅಲ್ಲ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವುದರಿಂದ ದೆಹಲಿಯ ಬಿಜೆಪಿ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಿತ್ತು. ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನು? ಎಂದು ಪ್ರಶ್ನಿಸಿದರು.
ನೀರಾವರಿ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನಿಸಿದ ಮಾಜಿ ಸಿಎಂ, ಕೃಷ್ಣಾ ನ್ಯಾಯಮಂಡಳಿ ತೀರ್ಪು ಹೊರಬಿದ್ದು 10 ವರ್ಷಗಳಾಗಿವೆ... ನೀರಾವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಏನು ಮಾಡಿದೆ? ಜೆಡಿಎಸ್ ರೈತರಿಗೆ ಅನ್ಯಾಯ ಮಾಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಆದರೆ ರೈತರಿಗಾಗಿ ನೀವು ಏನು ಮಾಡಿದ್ದೀರಿ ಎಂದು ಹೇಳಬೇಕಲ್ಲವೇ? ಎಂದರು.
ಅಧಿಕಾರಕ್ಕೆ ಬಂದರೆ ಪಿಎಫ್ಐ ಮತ್ತು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯ ವಿವಾದದ ಕುರಿತು ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ, “ನಿಷೇಧ ಮಾಡುವುದರಿಂದ ಸಮಸ್ಯೆ ಪರಿಹಾರವಾಗುತ್ತದೆಯೇ? ಎರಡೂ ಪಕ್ಷಗಳು ಈ ಬಗ್ಗೆ ಯೋಚಿಸಬೇಕು. ಅಮಾಯಕರನ್ನು ಬಜರಂಗದಳ ಬಳಸಿಕೊಳ್ಳುತ್ತಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ