ಕೆಲಸ ಇಲ್ಲದ ಬಿಜೆಪಿಯವರಿಂದ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಸೃಷ್ಟಿ: ಡಿಕೆ.ಶಿವಕುಮಾರ್

ಬಿಜೆಪಿ ನಾಯಕರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ನಾಯಕರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಈ ರೀತಿಯ ಯಾವ ಕಾರಣಕ್ಕೆ ಪತ್ರ ಬರೆಯುತ್ತಾರೆ? ಅವರು ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ಅದನ್ನೇ ನಾವಿಬ್ಬರೂ ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರು ನೀಡಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ಹಂಚುತ್ತಿದ್ದಾರೆಂದು ಹೇಳಿದರು.

ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡಲಾಗತ್ತಿದೆ. ಪ್ರಧಾನಿ ಮೋದಿ ಅವರು ಬಂದು ಬೀದಿ ಬೀದಿ ಅಲೆದಾಡಿದರು. ಬಂದು ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜೊತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದಿತ್ತೇ? ಬೇರೆ ಯಾವುದೇ ನಾಯಕರು ಬೆಳೆಯಬಾರದೇ? ನೂತನ ಸಂಸತ್ ಭವನಕ್ಕೂ ಒಬ್ಬರೇ ಹೋಗುತ್ತಾರೆ. ರಾಮ ಮಂದಿರ ಪೂಜೆಗೂ ಒಬ್ಬರೇ ಕೂರುತ್ತಾರೆ. ಮತ ಕೆಳುವಾಗಲೂ ಒಬ್ಬರೇ ಮಾಡುತ್ತಾರೆ. ನಾಯಕನಾದವ ನಾಯಕರನ್ನು ಸೃಷ್ಟಿ ಮಾಡಬೇಕು. ಈ ಸಮಯದಲ್ಲಿ ಅವರ ನಾಯಕರ ಶಕ್ತಿಯನ್ನು ಅವರೇ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ಇದು ಅಚ್ಚರಿ ತಂದಿದೆ ಎಂದು ತಿಳಿಸಿದರು.

ಸೋಲುವ ಭೀತಿಯಿಂದ ಇಷ್ಟು ಅಬ್ಬರದ ಪ್ರಚಾರ ಮಾಡಿದ್ದಾರೆ. ಇವರು ಎಷ್ಟೇ ಅಬ್ಬರದ ಪ್ರಚಾರ ಮಾಡಿದರೂ ರಾಜ್ಯದ ಜನ ಕೇಳುವುದಿಲ್ಲ. ಜನರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ದಕ್ಷ ಆಡಳಿತ, ರಾಜ್ಯದ ಅಭಿವೃದ್ಧಿ ಬೇಕಾಗಿದೆ’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com