ಸಿಎಂ ಆಯ್ಕೆ ಬಳಿಕ ಹೈಕಮಾಂಡ್'ಗೆ ಹೊಸ ಸಂಕಷ್ಟ: ಸಚಿವ ಸ್ಥಾನಕ್ಕೆ ನಾಯಕರ ಲಾಬಿ, ಡಿಕೆಶಿ, ಸಿದ್ದರಾಮಯ್ಯ ಇಂದು ಮತ್ತೆ ದೆಹಲಿಗೆ

ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಕಾಂಗ್ರೆಸ್ ಹೈಕಮಾಂಡ್'ಗೆ ಇದೀಗ ಸಚಿವ ಸಂಪುಟ ರಚನೆ ಮಾಡುವ ತಲೆನೋವು ಶುರುವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಕಾಂಗ್ರೆಸ್ ಹೈಕಮಾಂಡ್'ಗೆ ಇದೀಗ ಸಚಿವ ಸಂಪುಟ ರಚನೆ ಮಾಡುವ ತಲೆನೋವು ಶುರುವಾಗಿದೆ.

ಉಪ ಮುಖ್ಯಮಂತ್ರಿ ಒಬ್ಬರೇ ಇರುತ್ತಾರೆ ಎಂದು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಇದರ ಬೆನ್ನಲ್ಲೇ ಆ ಸ್ಥಾನದ ಆಕಾಂಕ್ಷಿಯಾಗಿದ್ದ ಕೆಲ ನಾಯಕರು ಈ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದರೂ, ಪಕ್ಷಕ್ಕೆ 34 ಕ್ಕಿಂತ ಹೆಚ್ಚು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಎಐಸಿಸಿ ಮುಂದಿರುವ ಪ್ರಮುಖ ಸವಾಲು ಎಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪಾಳಯದಿಂದ ಶಾಸಕರನ್ನು ಸೇರಿಸಿಕೊಳ್ಳುವುದಾಗಿದು ಹಾಗೂ ಆರೋಗ್ಯಕರ ಸಮತೋಲನವನ್ನು ಕಾಯ್ದುಕೊಳ್ಳುವುದಾಗಿದೆ.

ಈ ಹಿಂದೆ ಡಿಸಿಎಂ, ಗೃಹ, ಕಂದಾಯ ಹಾಗೂ ಇತರ ಪ್ರಮುಖ ಖಾತೆಗಳಲ್ಲಿ ಸೇವೆ ಸಲ್ಲಿಸಿದ ಹಲವು ಹಿರಿಯ ಶಾಸಕರು ಸಣ್ಣ ಖಾತೆಗಳಿಗೆ ತೃಪ್ತಿಪಡದಿರಬಹುದು.

ಕಾಂಗ್ರೆಸ್‌ ಹೈಕಮಾಂಡ್‌ನಲ್ಲಿ ಪ್ರಭಾವಶಾಲಿಯಾಗಿದ್ದ ಹಲವರು ಸೇರಿದಂತೆ ಹಲವು ಪ್ರಮುಖ ನಾಯಕರು ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ್ದಾರೆ. ಅಲ್ಲದೆ, ಹಿರಿತನ ಹಾಗೂ ಅನುಭವ ಇರುವ ಘಟಾನುಘಟಿಗಳು ಸಹ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಸೇರ್ಪಡೆಯಾದ ನಂತರ ಅವರನ್ನು ನಿಭಾಯಿಸುವುದು ಮುಂದಿರುವ ದೊಡ್ಡ ಸವಾಲಾಗಿದೆ.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಸಚಿವ ಸಂಪುಟದಲ್ಲಿ ಒಬ್ಬರೇ ಡಿಸಿಎಂ ಇರುತ್ತಾರೆ ಮತ್ತು ಅದನ್ನು ಶಿವಕುಮಾರ್ ಅವರಿಗೆ ನೀಡಲಾಗುವುದು ಎಂದು ಹೇಳಿದರು.

ಈ ಹೇಳಿಕೆ ನೀಡಿದ ಕೆಲವೇ ನಿಮಿಷಗಳಲ್ಲಿ ಮಾಜಿ ಡಿಸಿಎಂ ಡಾ.ಪರಮೇಶ್ವರ ಅವರು (ಎಐಸಿಸಿ) ನನ್ನನ್ನೂ ಡಿಸಿಎಂ ಮಾಡಬೇಕು ಎಂದು ಆಗ್ರಹಿಸಿದರು.

ನಾನು ಪ್ರತಿಭಟಿಸುವುದಿಲ್ಲ, ಆದರೆ ಪಕ್ಷಕ್ಕೆ ನನ್ನ ಕೊಡುಗೆಯನ್ನು ಗುರುತಿಸಬೇಕು. ರಾಜ್ಯದಲ್ಲಿ ಪಕ್ಷದ ಅಗಾಧ ಗೆಲುವಿಗೆ ಹಲವು ನಾಯಕರು ಶ್ರಮಿಸಿದ್ದಾರೆ. ಒಬ್ಬರೇ ಡಿಸಿಎಂ ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು.

ಹಿರಿಯ ಮುಖಂಡರೊಬ್ಬರ ಈ ಹೇಳಿಕೆ ಕಾಂಗ್ರೆಸ್ ಹೈ ಕಮಾಂಡ್'ಗೆ ಉಗುಳಾರದ ತುಪ್ಪವಾಗಿ ಪರಿಣಮಿಸಿದೆ.
ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಹಿರಿಯ ನಾಯಕರಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿಲ್ಲ. ಬಿಬಿಎಂಪಿ ಚುನಾವಣೆಗೂ ಮುನ್ನ ಮತ್ತೆ ಅಧಿಕಾರಕ್ಕೆ ಬರಲು ಸಂಪುಟದಲ್ಲಿ ಬಲಿಷ್ಠ ನಾಯಕರ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಂಪರ್ಕಿಸಿದಾಗ, ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ. “ನಾವು ಅನುಭವಿ ನಾಯಕರು ಹಾಗೂ ಹೊಸ ಮುಖಗಳೊಂದಿಗೆ ಸಂಪುಟ ರಚನೆ ಮಾಡುತ್ತೇವೆ. ಜಾತಿ ಮತ್ತು ಇತರ ಅಂಶಗಳನ್ನು ಸಮತೋಲನಗೊಳಿಸುತ್ತೇವೆ. ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡುತ್ತೇವೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com