

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಅಷ್ಟೆಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ವೇಳೆ ಭಾನುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನನಗೆ ಯಾವ ಖಾತೆ ನೀಡಿದರೂ ಬೇಷರತ್ತಾಗಿ ಜನರ ಸೇವೆ ಮಾಡುತ್ತೇನೆ. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇವೆ,'' ಎಂದು ಪ್ರತಿಪಾದಿಸಿದ ಅವರು, ಸತೀಶ್ ಜಾರಕಿಹೊಳಿ ಅವರಿಗೆ ಇಂದಲ್ಲ, ನಾಳೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದ
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ ಹೆಚ್ಚಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಲಾಖಾವಾರು ಅಧಿಕಾರಿಗಳ ಜೊತೆ ಸಭೆ ಮಾಡಬೇಕು. ನಾವೇನು ವಾಗ್ದಾನ ಮಾಡಿದ್ದೇವೆ, ಅವುಗಳನ್ನು ಸಂಪೂರ್ಣ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದವರು ಎರಡ್ಮೂರು ಬಾರಿ ಶಾಸಕರಾಗಿದ್ದಾರೆ. ಬೆಳಗಾವಿ ಮಾತ್ರವಲ್ಲ, ಬೇರೆ ಜಿಲ್ಲೆಗಳಲ್ಲಿಯೂ ಸಚಿವ ಸ್ಥಾನ ತಪ್ಪಿದ ಶಾಸಕರಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇದು ಸಾಮಾನ್ಯ ಮತ್ತು ಸಹಜ ವಿದ್ಯಮಾನವಾಗಿದ್ದು, ಅತೃಪ್ತರಿಗೆ ಸರ್ಕಾರದಲ್ಲಿ ಬೇರೆ ಸ್ಥಾನಗಳನ್ನು ನೀಡಲಾಗುವುದು, ಮುಖ್ಯಮಂತ್ರಿಗಳು ಅತೃಪ್ತ ಶಾಸಕರನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಅವರು ಹೇಳಿದರು. ಬಿಜೆಪಿ ಸರ್ಕಾರ ಕೈಗೊಂಡಿರುವ ಯೋಜನೆಗಳು ಮತ್ತು ಕಾಮಗಾರಿಗಳನ್ನು ಮುಂದುವರಿಸುವುದಾಗಿ ಹೇಳಿದರು.
ಸಂಬಂಧಪಟ್ಟ ಸಚಿವರು ತಮ್ಮ ಇಲಾಖೆಗಳಲ್ಲಿನ ಕಾಮಗಾರಿಗಳು ಅಥವಾ ಯೋಜನೆಗಳನ್ನು ಅವಲೋಕಿಸುತ್ತಾರೆ. ಯೋಜನೆಗಳು ಉತ್ತಮವಾಗಿದ್ದರೆ ಮತ್ತು ಸಾಮಾನ್ಯ ಜನರಿಗೆ ಪ್ರಯೋಜನಕಾರಿಯಾಗಿದ್ದರೆ, ನಾವು ಅದನ್ನು ಮುಂದುವರಿಸುತ್ತೇವೆ ಮತ್ತು ಇಲ್ಲದಿದ್ದರೆ, ಅವುಗಳನ್ನು ಸ್ಥಗಿತಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವ ಕುರಿತು ಯಾವುದೇ ಸಂಘಟನೆಯನ್ನು ನಿಷೇಧಿಸಲು ಆತುರಪಡುವ ಅಗತ್ಯವಿಲ್ಲ ಎಂದರು. ಭವಿಷ್ಯದಲ್ಲಿ ನಾವು ಈ ವಿಷಯವನ್ನು ಪರಿಶೀಲಿಸುತ್ತೇವೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ಮುಖ್ಯಮಂತ್ರಿ ಇರುತ್ತಾರೆ ಎಂದ ಅವರು, ರಾಜ್ಯ ನಾಯಕರು ಮತ್ತು ಪಕ್ಷದ ಹೈಕಮಾಂಡ್ ನಡುವೆ ಸಿಎಂ ಸ್ಥಾನದ ಚರ್ಚೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement