ಡಿಕೆ ಶಿವಕುಮಾರ್ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್: ಪರಮೇಶ್ವರ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ!

ಸಿಎಂ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ತನ್ನ ಆಪ್ತ ಸಚಿವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ತನ್ನ ಆಪ್ತ ಸಚಿವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ. ಔತಣಕೂಟದ ಜೊತೆಗೆ ಪಕ್ಷದಲ್ಲಿದ್ದ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿದೆ.

ಕಾಂಗ್ರೆಸ್ ಪಕ್ಷದಲ್ಲಿ‌ ಆಗುತ್ತಿರುವ ಬೆಳವಣಿಗೆಗಳ ಕುರಿತು ಅ.27ರ ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯ  ತನ್ನ ಆಪ್ತ ಸಚಿವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಗೊಳಿ ಔತಣಕೂಟ ನೆಪದಲ್ಲಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಮೂರು ತಾಸಿಗೂ ಹೆಚ್ಚು ಕಾಲ ಪರಂ ನಿವಾಸದಲ್ಲಿ ರಾಜಕೀಯ ಕುರಿತಾದ ಬಿಸಿಬಿಸಿ ಚರ್ಚೆ ನಡೆಸಲಾಯ್ತು.

ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್‌ ಆಪ್ತ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸದಾಶಿವನಗರದ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರ ಚರ್ಚೆ ನಡೆದಿದೆ. ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ‌, ಎಚ್.ಸಿ. ಮಹದೇವಪ್ಪ ಅವರಿಗೆ ರಾತ್ರಿ ಭೋಜನಕ್ಕೆ ಪರಮೇಶ್ವರ್ ಆಹ್ವಾನ ನೀಡಿದ್ದರು. ಈ ವೇಳೆ ಪ್ರಸ್ತುತ ರಾಜಕಾರಣ, ಪಕ್ಷದೊಳಗಿನ ಭಿನ್ನಾಭಿಪ್ರಾಯ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಇನ್ನು ಬೆಳಗಾವಿ ರಾಜಕೀಯಕ್ಕೆ ಕೈ ಹಾಕಿದ್ದಕ್ಕೆ ಡಿಕೆಶಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ. ಹೀಗಾಗಿ ಅವರನ್ನು ಸಮಾಧಾನಪಡಿಸಲು ಔತನಕೂಟ ಏರ್ಪಡಿಸಲಾಗಿತ್ತು ಎನ್ನಲಾಗುತ್ತಿದೆ. ಮತ್ತೊಂದೆಡೆ 50-50 ಫಾರ್ಮುಲಾ ಎನ್ನುತ್ತಿರುವ ಡಿಕೆಶಿ ಆಪ್ತ ಶಾಸಕರ ಹೇಳಿಕೆಗಳಿಗೆ ಸಭೆ ಮೂಲಕ ಸಿಎಂ ಚೆಕ್‌ಮೇಟ್ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಸಚಿವರ ಗುಪ್ತ ಮೀಟಿಂಗ್ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನೂ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಊಟಕ್ಕೊಸ್ಕರ ಸೇರಿದ್ವಿ ಸಿಎಂ ಅವರು ನಮ್ಮ ಮನೆಗೆ ಬಂದಿದ್ರು. ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ವಿ. ಊಟ ಮಾಡಿದ್ವಿ ಅಷ್ಟೇ ಬೇರೆ ಏನು ಚರ್ಚೆಯಾಗಿಲ್ಲ. ನಿಗಮ ಮಂಡಳಿಯ ಬಗ್ಗೆ ಇಲ್ಲಿ ಚರ್ಚೆ ಮಾಡೋಕಾಗುತ್ತಾ? ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com