ಮಾಲೂರು: ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿದ್ದು ಬಣದ ಶಾಸಕರು ಆಗ್ರಹಿಸುತ್ತಿದ್ದಾರೆ.
ಭಾನುವಾರ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ವೈ. ನಂಜೇಗೌಡ, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ರೀತಿಯ ಅವಕಾಶ ಪಡೆದಿರುವ ಬಿ.ಕೆ. ಹರಿಪ್ರಸಾದ್, ಈಗ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ವಿರುದ್ಧವೇ ಮಾತನಾಡುತ್ತಿರುವುದು ಸರಿಯಲ್ಲ. ಮಂತ್ರಿ ಮಾಡಿಲ್ಲವೆಂದು ಕೊಟ್ಟ ಅವಕಾಶ ಮರೆತು ಪಕ್ಷದ ವಿರುದ್ದವೇ ಮಾತನಾಡುವುದು ಖಂಡನೀಯ ಎಂದರು.
ಕಾಂಗ್ರೆಸ್ಗೆ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೊಡುಗೆ ಏನು? ಎಂದು ಪ್ರಶ್ನಿಸಿದ ನಂಜೇಗೌಡ, ಸಿಎಂ ವಿರುದ್ಧ ಹರಿಪ್ರಸಾದ್ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ಸಮೀಪದಲ್ಲಿರುವಾಗ ಪಕ್ಷದ ಹಿರಿಯ ನಾಯಕರೊಬ್ಬರು ಈ ರೀತಿ ಮಾತನಾಡುವುದು ಸರಿ ಅಲ್ಲ. ಕಾಂಗ್ರೆಸ್ಗೆ ಡ್ಯಾಮೇಜ್ ಆಗುವ ರೀತಿ ಹೇಳಿಕೆ ನೀಡಿರುವ ಅವರ ವಿರುದ್ಧ ಕೆಪಿಸಿಸಿ ಮತ್ತು ಎಐಸಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Advertisement