ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್, ‘ಫ್ಲೈಯಿಂಗ್ ಸ್ಕ್ಯಾಡ್, ಸ್ಥಳೀಯ ಚುನಾವಣಾಧಿಕಾರಿ ಮತ್ತು ಮಾದರಿ ನೀತಿ ಸಂಹಿತೆ ಜಾರಿ ನೋಡೆಲ್ ಅಧಿಕಾರಿ ಅವರು ನೀಡಿರುವ ವರದಿಗಳ ಆಧಾರದಲ್ಲಿ ನೋಟಿಸ್ ನೀಡಲಾಗಿದೆ’ ಎಂದು ಹೇಳಿದರು.
ಏನಿದು ಘಟನೆ?
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತೀಂದ್ರ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದರು. ಈ ವೇಳೆ, ‘ಅವರೊಬ್ಬ, ಗೂಂಡಾ, ರೌಡಿ. ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಪ್ರಕರಣಗಳಿವೆ. ಅಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಟೀಕಿಸಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ, ಯತೀಂದ್ರ ವಿರುದ್ಧ ಚುನಾವಣಾ ಅಧಿಕಾರಿಯವರಿಗೆ ದೂರು ನೀಡಿತ್ತು.
Advertisement