ಬೆಳಗಾವಿ: ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ವೈಯಕ್ತಿಕ ಜೀವನ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿಲ್ಲ. ಜೆಪಿಯ ಕೆಲ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪಗಳನ್ನಷ್ಟೇ ಪುನರುಚ್ಚರಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಹೇಳಿದರು.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಶೆಟ್ಟರ್ ಅವರ ವೈಯಕ್ತಿಕ ಜೀವನವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಮಟ್ಟಕ್ಕೆ ನಾನು ಇಳಿದಿಲ್ಲ. ಬಿಜೆಪಿಯ ಕೆಲ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪಗಳನ್ನು ಮಾತ್ರ ಪ್ರಸ್ತಾಪಿಸಿದ್ದೇನೆ. ಶೆಟ್ಟರ ಅವರ ಪುತ್ರ ಮಾಜಿ ಕೇಂದ್ರ ಸಚಿವ ಮತ್ತು ಬೆಳಗಾವಿ ಸಂಸದ ದಿವಂಗತ ಸುರೇಶ ಅಂಗಡಿಯವರ ಮಗಳನ್ನು ಮದುವೆಯಾಗಿದ್ದು, ಇದೀಗ ಸುರೇಶ್ ಅಂಗಡಿಯವರ ನಿವಾಲ ಶೆಟ್ಟರ್ ಅವರ ವಿಳಾಸವಾಗಿದೆ ಎಂದು ಹೇಳಿದರು.
ಶೆಟ್ಟರ್ ಅವರು ಚುನಾವಣೆಯಲ್ಲಿ ಗೆದ್ದು ಕೇಂದ್ರ ಸಚಿವರಾದ ನಂತರ ಕಾಂಗ್ರೆಸ್ ನಾಯಕರು ಅವರ ಹಿಂದೆ ಓಡುತ್ತಾರೆ ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ನಾನೂ ಕೂಡ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆಂದು ವ್ಯಂಗ್ಯವಾಡಿದರು.
ಬಿಜೆಪಿ ತನ್ನ ರಾಜಕೀಯ ಆಟವನ್ನು ಆಡಲಿ. ನಾವೂ ಕೂಡ ನಮ್ಮದೇ ಆಟವನ್ನು ಆಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ, ಚಿಕ್ಕೋಡಿ ಮತ್ತು ಕಿತ್ತೂರಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮೃಣಾಲ್ ಹೆಬ್ಬಾಳ್ಕರ್, ಪ್ರಿಯಾಂಕಾ ಜಾರಕಿಹೊಳಿ ಮತ್ತು ಡಾ.ಅಂಜಲಿ ನಿಂಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಯ ಬಿಸಿ ನಿಧಾನವಾಗಿ ಏರುತ್ತಿದ್ದು, ಪ್ರಚಾರದ ವೇಳೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರದ ಸ್ಟಾರ್ ಪ್ರಚಾರಕರು ಕೂಡ ಪ್ರಚಾರಕ್ಕೆ ಬರುತ್ತಾರೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಮಾತನಾಡಿ, ‘ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವ ನಾಯಕರು ಶ್ರಮಿಸಿದರು ಎಂಬುದು ಮತದಾರರಿಗೆ ಗೊತ್ತಿದೆ. ರಹಸ್ಯ ಸಭೆಗಳನ್ನು ನಡೆಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗಿದೆ. ಲೋಕಸಭೆ ಚುನಾವಣೆಯನ್ನು ಶಾಂತಿಯುತವಾಗಿ ಎದುರಿಸುತ್ತಿದ್ದೇವೆ. ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆಂಬ ವಿಶ್ವಾಸ ನನಗಿದೆ ಎಂದರು.
Advertisement